

ನೈಋತ್ಯ ದೆಹಲಿಯ ಬಿಂದಾಪುರದಲ್ಲಿ ಮೋಟಾರ್ ಸೈಕಲ್ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳದಲ್ಲಿ 32 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಘಟನೆ ಮಧ್ಯಾಹ್ನ 2.50ಕ್ಕೆ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. 'ಇಬ್ಬರು-ಮೂವರು ಹುಡುಗರು' ತನ್ನ ಮಗಳು ಮತ್ತು ಅಳಿಯನ ಹೊಟ್ಟೆಗೆ ಇರಿದಿದ್ದಾರೆ ಎಂದು ಕರೆ ಮಾಡಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಬರುವ ಹೊತ್ತಿಗೆ, ಗಾಯಾಳುಗಳನ್ನು ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ, ಆರತಿ ಎಂಬುವವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಪತಿ ವಿಕ್ಕಿಗೂ ಚಾಕುವಿನಿಂದ ಇರಿಯಲಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ, ರಸ್ತೆಯಲ್ಲಿ ಮೋಟಾರ್ ಸೈಕಲ್ ನಿಲ್ಲಿಸುವ ವಿಚಾರವಾಗಿ ದಂಪತಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾರೆ. ಜಗಳ ತೀವ್ರಗೊಂಡು, ಆರತಿ ಮತ್ತು ವಿಕ್ಕಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ದಾಳಿಕೋರರನ್ನು 40 ವರ್ಷದ ಪಪ್ಪು ಮತ್ತು ಅಪ್ರಾಪ್ತ ಎಂದು ಗುರುತಿಸಿದ್ದಾರೆ. ಇಬ್ಬರೂ ಒಂದೇ ಪ್ರದೇಶದ ನಿವಾಸಿಗಳು. ಸದ್ಯ ಪಪ್ಪುನನ್ನು ಬಂಧಿಸಲಾಗಿದ್ದು, ಅಪ್ರಾಪ್ತನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.
Advertisement