ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಎರಡು ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದ ಬಳಿಕ ಸಂಪ್ರದಾಯದಂತೆ ರಾಷ್ಟ್ರಪತಿಯನ್ನು ಭೇಟಿಯಾಗಿ ಮಾಹಿತಿ ನೀಡಿದ್ದರು. ಆದರೆ, ಅಮಿತ್ ಶಾ ಅವರ ಭೇಟಿ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದ ಚರ್ಚೆಗಳಿಗೆ ಮತ್ತಷ್ಟು ಬಲ ನೀಡಿದೆ.
Amit Shah meets President
ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ
Updated on

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತ ಊಹಾಪೋಹಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಎರಡು ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದ ಬಳಿಕ ಸಂಪ್ರದಾಯದಂತೆ ರಾಷ್ಟ್ರಪತಿಯನ್ನು ಭೇಟಿಯಾಗಿ ಮಾಹಿತಿ ನೀಡಿದ್ದರು. ಆದರೆ, ಅಮಿತ್ ಶಾ ಅವರ ಭೇಟಿ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದ ಚರ್ಚೆಗಳಿಗೆ ಮತ್ತಷ್ಟು ಬಲ ನೀಡಿದೆ.

ಇದರ ನಡುವೆಯೇ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ತನ್ನ ರಾಜ್ಯ ಘಟಕದ ಸಂಘಟನಾ ಪುನಾರಚನೆಯನ್ನು ಘೋಷಿಸಿದೆ.

ಹೊಸ ಪದಾಧಿಕಾರಿಗಳ ಪಟ್ಟಿಯಲ್ಲಿ ವಿವಿಧ ಸಾಮಾಜಿಕ ವರ್ಗಗಳಿಗೆ ಸಮರ್ಪಕ ಪ್ರಾತಿನಿಧ್ಯ ನೀಡಲು ಪಕ್ಷ ಪ್ರಯತ್ನಿಸಿರುವುದು ಗಮನಾರ್ಹವಾಗಿದೆ.

ಆದರೆ, ಬಿಜೆಪಿ ಮೂಲಗಳ ಪ್ರಕಾರ ಅಮಿತ್ ಶಾ ಅವರ ರಾಷ್ಟ್ರಪತಿ ಭೇಟಿಯು ಇತ್ತೀಚಿನ ಜನ್ಮದಿನದ ಶುಭಾಶಯ ಕೋರಲು ಅಥವಾ ನಿಯಮಿತ ಆಡಳಿತಾತ್ಮಕ ಸಮಾಲೋಚನೆಯ ಭಾಗವಾಗಿರಬಹುದು ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಇದ್ದರೂ, ಈ ಭೇಟಿಯು ಅದಕ್ಕೆ ಸಂಬಂಧಪಟ್ಟದ್ದೇ ಎಂಬುದು ಖಚಿತವಿಲ್ಲ" ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Amit Shah meets President
2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! BJP-JDS ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

ಈ ಬೆಳವಣಿಗೆಯ ನಡುವೆ ಕೇಂದ್ರ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಸದಸ್ಯತ್ವ ಜೂನ್ 21ರಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಇದೇ ದಿನ ರಾಜ್ಯಸಭಾ ಅವಧಿ ಮುಗಿದಿದ್ದರೂ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಇನ್ನೂ ಸಚಿವ ಸಂಪುಟದಲ್ಲೇ ಮುಂದುವರಿದಿದ್ದಾರೆ. ಈ ಬೆಳವಣಿಗೆಗಳಿಗೂ ಶಾ ಅವರ ಭೇಟಿಗೂ ಸಂಬಂಧ ಇರಬಹುದೆಂಬ ಊಹಾಪೋಹಗಳು ಕೇಳಿಬರುತ್ತಿವೆ.

ಮತ್ತೊಂದೆಡೆ, 2027ರಲ್ಲಿ ನಡೆಯಲಿರುವ ಏಳು ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮುನ್ನ ಕೆಲವು ರಾಜ್ಯಪಾಲರ ನೇಮಕಾತಿಗಳಲ್ಲೂ ಬದಲಾವಣೆಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆಡಳಿತಾತ್ಮಕ ಸಮನ್ವಯ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಮುಖ ಸಚಿವಾಲಯವೊಂದನ್ನು ರೈಲ್ವೆ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಬಗ್ಗೆ ಕೂಡ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಸಂಪುಟ ಪುನಾರಚನೆ ನಡೆದರೆ ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿರುವ ಕೆಲ ನಾಯಕರಿಗೆ ಸಚಿವ ಸ್ಥಾನ ದೊರೆಯಬಹುದು ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ವಿನೋದ್ ತಾವ್ಡೆ, ತರುಣ್ ಚುಗ್ ಮತ್ತು ಕೆ. ಲಕ್ಷ್ಮಣ್ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪುನಾರಚನೆ ನಡೆಯುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಹಿರಿಯ ಮೂಲಗಳು ತಿಳಿಸಿವೆ.

ಇದೇ ವೇಳೆ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷಗಳಲ್ಲಿ ಉಂಟಾದ ವಿಭಜನೆ ಮತ್ತು ಬಂಡಾಯ ಸಂಸದರನ್ನು ಅನರ್ಹಗೊಳಿಸುವ ಕುರಿತ ಬೇಡಿಕೆಗಳ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಪ್ರಮುಖ ಮಸೂದೆಗಳನ್ನು ಸುಗಮವಾಗಿ ಅಂಗೀಕರಿಸಲು ಸರ್ಕಾರ ಸಂಸತ್ತಿನಲ್ಲಿ ತನ್ನ ಸಂಖ್ಯಾಬಲವನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com