

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2026 ಅನ್ನು ಪ್ರಶ್ನೆಪತ್ರಿಕೆ ಸೋರಿಕೆಯ ಶಂಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದ ದಾಳಿಯ ವೇಳೆ ಕೆಲವು ವ್ಯಕ್ತಿಗಳ ಬಳಿ ನಿಜವಾದ ಪ್ರಶ್ನೆಪತ್ರಿಕೆಗೆ ಹೋಲುವ ಹಲವು ಪ್ರಶ್ನೆಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
"ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಡೆಸಲು ಮಂಡಳಿ ಬದ್ಧವಾಗಿದೆ. ಪರಿಸ್ಥಿತಿಯ ಗಂಭೀರತೆ ಹಾಗೂ ಸಮಗ್ರ ತನಿಖೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, 2026ರ ಜೂನ್ 28ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ" ಎಂದು ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿ (MSCE) ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಥಾಣೆ ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ, ಶನಿವಾರ ಮುಂಜಾನೆ ಭಿವಂಡಿ ಪೊಲೀಸರು ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಅನಧಿಕೃತ ಮಾಹಿತಿಯನ್ನು ಹೊಂದಿದ್ದ ಕೆಲವರ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕ್ರಮ ಕೈಗೊಂಡಿದ್ದರು.
"ಶಂಕಿತ ಸ್ಥಳದ ಮೇಲೆ ತಕ್ಷಣ ದಾಳಿ ನಡೆಸಲಾಯಿತು. ವಶಪಡಿಸಿಕೊಳ್ಳಲಾದ ದಾಖಲೆಗಳನ್ನು ಪರಿಶೀಲಿಸಲು ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಕರೆಸಲಾಯಿತು.
ಪರಿಶೀಲನೆಯ ವೇಳೆ ಶಂಕಿತರ ಬಳಿ ಪತ್ತೆಯಾದ ಹಲವು ಪ್ರಶ್ನೆಗಳು ಜೂನ್ 2026ರ ಟಿಇಟಿ ಪರೀಕ್ಷೆಗಾಗಿ ಸಿದ್ಧಪಡಿಸಲಾಗಿದ್ದ ನಿಜವಾದ ಪ್ರಶ್ನೆಪತ್ರಿಕೆಯ ಪ್ರಶ್ನೆಗಳೊಂದಿಗೆ ಹೊಂದಿಕೆಯಾಗಿರುವುದು ದೃಢಪಟ್ಟಿದೆ" ಎಂದು ಜಿಲ್ಲಾ ಆಡಳಿತ ತಿಳಿಸಿದೆ.
ಈ ಸಂಬಂಧ ಭಿವಂಡಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಸಮಗ್ರ ತನಿಖೆ ಮುಂದುವರಿದಿದೆ.
ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳ ವಿರುದ್ಧ 'ಶೂನ್ಯ ಸಹಿಷ್ಣುತೆ' ನೀತಿಯನ್ನು ಅನುಸರಿಸುವುದಾಗಿ ತಿಳಿಸಿರುವ ಎಂಎಸ್ಸಿಇ, ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಹಾಗೂ ಕಾನೂನು ಜಾರಿ ಸಂಸ್ಥೆಗಳು ಯಾವುದೇ ಅಡ್ಡಿಯಿಲ್ಲದೆ ಆಳವಾದ ತನಿಖೆ ನಡೆಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಅಭ್ಯರ್ಥಿಗಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿರುವ ಮಂಡಳಿ, ಟಿಇಟಿ-2026ರ ಹೊಸ ಪರೀಕ್ಷಾ ದಿನಾಂಕಗಳು ಮತ್ತು ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.