

ನವದೆಹಲಿ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್ ಶನಿವಾರ ಪ್ರಶ್ನಿಸಿದೆ. ಹಗರಣ ಆರೋಪದ ಹಿಂದಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಅಖಿಲೇಶ್ ಪ್ರಸಾದ್ ಸಿಂಗ್, ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದರು.
ಗಂಭೀರ ಆರೋಪ ಕೇಳಿಬಂದಿರುವ ಟ್ರಸ್ಟ್ನಲ್ಲಿರುವವರನ್ನು ತಕ್ಷಣ ಬಂಧಿಸಬೇಕು ಮತ್ತು ಟ್ರಸ್ಟ್ "ಜನರ ನಂಬಿಕೆಯನ್ನು ಕಳೆದುಕೊಂಡಿದ್ದು, ಅದನ್ನು ಕೂಡಲೇ ವಿಸರ್ಜಿಸಬೇಕೆಂದು ಒತ್ತಾಯಿಸಿದರು.
ವಿಶೇಷ ತನಿಖಾ ತಂಡ (ಎಸ್ಐಟಿ) ದೇವಾಲಯದ ದೇಣಿಗೆ ನಿರ್ವಹಣಾ ವ್ಯವಸ್ಥೆಯಲ್ಲಿನ ದೋಷಗಳನ್ನು ಬಹಿರಂಗಪಡಿಸಿದ ನಂತರ ರಾಮ ಮಂದಿರ ದೇಣಿಗೆ ವಿಚಾರ ಪ್ರಮುಖ ರಾಜಕೀಯ ವಿವಾದವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಎಣಿಸುವಲ್ಲಿ ತೊಡಗಿದ್ದ ಎಂಟು ಜನರನ್ನು ಬಂಧಿಸಲಾಗಿದೆ. ತನಿಖೆಗೆ ಆದೇಶಿಸದ ಬಿಜೆಪಿ ನಾಯಕರು "ನಿಜವಾದ ರಾಮಭಕ್ತರು" ಅಲ್ಲ ಎಂಬುದನ್ನು ಈ ಘಟನೆ ತೋರಿಸಿದೆ ಎಂದು ಸಿಂಗ್ ಆರೋಪಿಸಿದರು.
ಇಷ್ಟು ದೊಡ್ಡ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನವಾಗಿದ್ದಾರೆಂದು ದೇಶ ತಿಳಿಯಲು ಬಯಸುತ್ತಿದೆ.ಜನರ ನಂಬಿಕೆ ಉಳಿಯುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಈ ಪ್ರಕರಣದ ನ್ಯಾಯಯುತ ತನಿಖೆ ನಡೆಸಲು ಮುಂದಾಗಬೇಕು ಎಂದು ಅವರು ಹೇಳಿದರು.
"ಇದೆಲ್ಲವೂ ಅವರು ರಾಮಭಕ್ತರಲ್ಲ ಎಂದು ಸಾಬೀತುಪಡಿಸಿದೆ. ಅವರು ರಾಮಭಕ್ತರಾಗಿದ್ದರೆ, ರಾಮನ ಮಾರ್ಯಾದೆ ತೆಗೆಯುವ ಕೆಲಸ ಮಾಡ್ತಿರಲಿಲ್ಲ. ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುತ್ತಿದ್ದರು ಏಕೆಂದರೆ ಈ ಟ್ರಸ್ಟ್ ಅನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿದೆ ಎಂದು ಸಿಂಗ್ ಹೇಳಿದರು.
ಈ ಮಧ್ಯೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬಾಲಿವುಡ್ ಸಿನಿಮಾ ಉಪಕಾರ್ನ ಸಂಭಾಷಣೆಯನ್ನು ಬಳಸಿ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇದು ನಿಜವಾಗಿಯೂ ದುರಂತ" ಮತ್ತು ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸಿದ್ದಾರೆ.