

ಸಹರಣಪುರ್: ಉತ್ತರ ಪ್ರದೇಶದ ಸಹಾರನ್ಪುರ್ ಸಮೀಪದ ಡೆಹ್ರಾಡೂನ್-ಪಂಚಕುಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಡೆಹ್ರಾಡೂನ್-ಪಂಚಕುಲಾ ಹೆದ್ದಾರಿಯಲ್ಲಿ ಟಾಟಾ ಟಿಯೋಗೋ ಕಾರು ರಿವರ್ಸ್ ಬರುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬೊಲೆರೋ ಎಸ್ ಯುವಿ ಢಿಕ್ಕಿಯಾಗಿದ್ದು ಈ ವೇಳೆ ಅಪಘಾತದ ರಭಸಕ್ಕೆ ಬೊಲೆರೊ ಎಸ್ಯುವಿಯೂ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಚರಣ್ ಸಿಂಗ್, ಅವರ ಪತ್ನಿ ಸುದೇಶ್, ಸೊಸೆ ಪ್ರೀತಿ ಹಾಗೂ ಮೊಮ್ಮಗ ಶಿವಾಂಶ್ ಎಂದು ಗುರುತಿಸಲಾಗಿದೆ. ಪ್ರವೀಣ್, ಸಾಹದೇವ್ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಹರಿಯಾಣದ ಸೋನಿಪತ್ ಜಿಲ್ಲೆಯ ಬಹಾದುರ್ಗಢ ನಿವಾಸಿಗಳಾಗಿದ್ದು, ಹರಿದ್ವಾರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಿದ್ದೇನು?
ಶುಕ್ರವಾರ ರಾಂಪುರ ಮನಿಹರಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಲ್ಗೋಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಹೆದ್ದಾರಿಯಲ್ಲಿ ಹಿಂದಕ್ಕೆ ಚಲಿಸಲು ಯತ್ನಿಸುತ್ತಿದ್ದ ಟಾಟಾ ಟಿಯಾಗೊ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಬೊಲೆರೊ ಡಿಕ್ಕಿ ಹೊಡೆಯುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಢಿಕ್ಕಿಯ ತೀವ್ರತೆಗೆ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿ, ಅಲ್ಲಿಂದ ಎಸೆದು ಮತ್ತೊಂದು ವಿಭಜಕಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ವಾಹನ ಸವಾರರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾದರು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, 108 ಆಂಬುಲೆನ್ಸ್ ಮೂಲಕ ಎಲ್ಲ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಉಳಿದ ಮೂವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.