

ಕೋಲ್ಕತ್ತಾ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಮೂರುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ ಆನಂದ ಬೋಸ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಲೋಕ ಭವನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯಪಾಲರ ರಾಜೀನಾಮೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ರಾಜ್ಯಪಾಲರ ಕಚೇರಿಯಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ" ಎಂದು ಆನಂದ ಬೋಸ್ ಹೇಳಿದ್ದು, ಇದು ಸಾಂವಿಧಾನಿಕ ಹುದ್ದೆಯಿಂದ ತೆರಳುವ ಅವರ ನಿರ್ಧಾರವನ್ನು ಸೂಚಿಸುತ್ತದೆ.
ಬೋಸ್ ಅವರು 2022 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರವಿಗೆ ಹೆಚ್ಚುವರಿ ಜವಾಬ್ದಾರಿ
ಏತನ್ಮಧ್ಯೆ, ಬೋಸ್ ರಾಜೀನಾಮೆ ನಂತರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಪಶ್ಚಿಮ ಬಂಗಾಳದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೃಢಪಡಿಸಿದ್ದಾರೆ.
"ಕೇಂದ್ರ ಗೃಹ ಸಚಿವ (ಅಮಿತ್ ಶಾ) ಅವರಿಂದ ಆರ್.ಎನ್. ರವಿ ಅವರು ಬಂಗಾಳ ರಾಜ್ಯಪಾಲರಾಗಿ ನೇಮಕಗೊಳ್ಳಲಿದ್ದಾರೆ ಎಂದು ನನಗೆ ತಿಳಿದುಬಂದಿದೆ" ಎಂದು ಮಮತಾ ಬ್ಯಾನರ್ಜಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೋಸ್ ಅವರ ರಾಜೀನಾಮೆ ಬಗ್ಗೆ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದು, ಬಂಗಾಳ ಚುನಾವಣೆಗೆ ಮುನ್ನ ಅಮಿತ್ ಶಾ ಅವರು "ರಾಜಕೀಯ ಕಾರಣಗಳಿಗಾಗಿ" ಒತ್ತಡವನ್ನು ಎದುರಿಸಿರಬಹುದು ಎಂದು ಆರೋಪಿಸಿದ್ದಾರೆ.
Advertisement