

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ನಟ-ರಾಜಕಾರಣಿ ವಿಜಯ್ ನೇತೃತ್ವದ TVK ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿಬರುತಿತ್ತು.
ಈ ಕುರಿತು ಇಂದು ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಮುಖ್ಯಸ್ಥ ನೈನಾರ್ ನಾಗೇಂದ್ರನ್, ಅಂತಹ ಯಾವುದೇ ಮಾತುಕತೆಯನ್ನು ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಬಗ್ಗೆ NDA ದೃಢವಾಗಿದೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ ಜೊತೆಗಿನ ಮೈತ್ರಿಗಾಗಿ ಮಾತುಕತೆ ನಡೆಸಲಾಗುತ್ತಿದೆ ಎಂಬುದು ಬರೀ ವದಂತಿ ಎಂದು ತಳ್ಳಿಹಾಕಿದ ನಾಗೇಂದ್ರನ್, ರಾಜ್ಯದಲ್ಲಿನ ಎನ್ಡಿಎಯ ಸ್ವರೂಪದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
"ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎನ್ಡಿಎಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರೇ ಮುಖ್ಯಮಂತ್ರಿ ಅಭ್ಯರ್ಥಿ. ಮುಂಬರುವ ಚುನಾವಣೆಯಲ್ಲಿ ನಾವು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾಗೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.
ಎಐಎಡಿಎಂಕೆ ಸರ್ಕಾರ ರಚಿಸುವಾಗ ಬಿಜೆಪಿ ಅಧಿಕಾರದಲ್ಲಿ ಪಾಲು ಬಯಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಮ್ಮ ಮೈತ್ರಿಯಲ್ಲಿ ದೃಢವಾಗಿದ್ದೇವೆ. ನಾವು ಶೀಘ್ರದಲ್ಲೇ ಸೀಟು ಹಂಚಿಕೆ ಮಾತುಕತೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದ ನಾಗೇಂದ್ರನ್, ಎನ್ಡಿಎ ಜೊತೆಗೆ TVK ಮೈತ್ರಿ ಕುರಿತು ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಹೇಳಿದರು.
Advertisement