'ನಡೆದರೆ ತಪ್ಪೇನು?': ದಕ್ಷಿಣ ಕನ್ನಡ, ಉಡುಪಿ ಹೊರಗೆ 'ಕಂಬಳ' ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.
Supreme Court
ಸುಪ್ರೀಂ ಕೋರ್ಟ್
Updated on

ನವದೆಹಲಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ 'ಕಂಬಳ'ವನ್ನು ನಡೆಸುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಇದನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು ಎಂದು ಮಂಗಳವಾರ ಕೇಳಿದೆ.

ನವೆಂಬರ್ ಮತ್ತು ಮಾರ್ಚ್ ನಡುವೆ ಕರ್ನಾಟಕದಲ್ಲಿ ಕಂಬಳ ನಡೆಯುತ್ತದೆ.

ಕರ್ನಾಟಕ ಹೈಕೋರ್ಟ್‌ನ ನವೆಂಬರ್ 14ರ ಆದೇಶವನ್ನು ಪ್ರಶ್ನಿಸಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ನಡೆಸಿತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

'ಅವರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಸ್ಕೃತಿಯನ್ನು ಪ್ರದರ್ಶಿಸಲು ಬಯಸಿದರೆ, ಅದರಲ್ಲಿ ತಪ್ಪೇನು? ರಾಜ್ಯದ ಇತರ ಭಾಗಗಳ ಜನರು ಸಹ ಸಂಸ್ಕೃತಿಯೊಂದಿಗೆ ಪರಿಚಿತರಾಗಲಿ. ಅದನ್ನು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು?' ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಮೆಹ್ತಾ ಹೇಳಿದರು.

Supreme Court
ಕಂಬಳ ಕ್ರೀಡೆ: ಕರಾವಳಿಯ ವಿದ್ಯಾವಂತ ಯುವಕರಿಗೆ ಜನಪ್ರಿಯತೆ ಜೊತೆಗೆ ಆದಾಯಕ್ಕೂ ಮೂಲ

ಕಂಬಳಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯವು ಈ ಹಿಂದೆ ಸಲ್ಲಿಸಿದ್ದ ಅಫಿಡವಿಟ್ ಅನ್ನು ಪೆಟಾ ಇಂಡಿಯಾ ಪರ ಹಾಜರಾದ ವಕೀಲರು ಉಲ್ಲೇಖಿಸಿದರು.

ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳಲ್ಲಿ ಇದು ಸಾಂಪ್ರದಾಯಿಕ ಕ್ರೀಡೆಯಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. 'ಬೆಂಗಳೂರಿನ ಸಂಪ್ರದಾಯ ಮತ್ತು ಸಂಸ್ಕೃತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ಈಗ ಈ ಕಾರ್ಯಕ್ರಮವನ್ನು ರಾಜ್ಯ ರಾಜಧಾನಿಯಲ್ಲಿ ನಡೆಸಲಾಗುತ್ತಿದೆ' ಎಂದು ಹೇಳಿದರು.

ಅರ್ಜಿಯನ್ನು ವಜಾಗೊಳಿಸಿದ ಪೀಠವು, 'ಇನ್ನೊಂದು ದಿನ, ನಾವು ಪೆಟಾ ಇಂಡಿಯಾ ಮುಂದೆಯೂ ಕೆಲವು ಪ್ರಶ್ನೆಗಳನ್ನು ಇಡಬಹುದು' ಎಂದು ಹೇಳಿದರು.

2023ರ ಮೇನಲ್ಲಿ, ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು 'ಜಲ್ಲಿಕಟ್ಟು' ಮತ್ತು ಕಂಬಳಕ್ಕೆ ಅನುಮತಿ ನೀಡುವ ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದ ತಿದ್ದುಪಡಿ ಕಾಯ್ದೆಗಳ ಸಿಂಧುತ್ವವನ್ನು ಎತ್ತಿಹಿಡಿದು, ಅವುಗಳನ್ನು 'ಮಾನ್ಯ ಕಾನೂನುಗಳು' ಎಂದು ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com