

ಜೋಧಪುರ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಬಂಧಿಸಲಾಗಿದ್ದ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಶನಿವಾರ ಜೋಧ್ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.
ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್ಚುಕ್ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದ ಪ್ರಕಾರ ವಾಂಗ್ಚುಕ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ 26 ರಂದು ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್ಎಸ್ಎ) ಅಡಿಯಲ್ಲಿ ಬಂಧಿಸಲಾಗಿತ್ತು.
ಕಾಯ್ದೆಯಡಿಯಲ್ಲಿ ನಿಗದಿಪಡಿಸಿದ ಬಂಧನ ಅವಧಿಯ ಅರ್ಧದಷ್ಟು ಭಾಗವನ್ನು ಅವರು ಈಗಾಗಲೇ ಜೈಲಿನಲ್ಲಿ ಅನುಭವಿಸಿದ್ದಾರೆ.
"ಕೇಂದ್ರ ಸರ್ಕಾರದ ಆದೇಶದ ನಂತರ ಸೋನಮ್ ವಾಂಗ್ಚುಕ್ ಅವರನ್ನು ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಲಾಯಿತು" ಎಂದು ರತನಾಡ ಪೊಲೀಸ್ ಠಾಣೆಯ ಎಸ್ಎಚ್ಒ ದಿನೇಶ್ ಲಖವತ್ ಅವರು ತಿಳಿಸಿದ್ದಾರೆ.
ಲಡಾಖ್ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಅದನ್ನು ಸೇರಿಸಬೇಕು ಎಂದು ಆಗ್ರಹಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಸೆಪ್ಟೆಂಬರ್ 26, 2025 ರಂದು ವಾಂಗ್ಚುಕ್ ಅವರನ್ನು ಬಂಧಿಸಿ, ರಾಜಸ್ಥಾನದ ಜೋಧ್ಪುರ ಜೈಲಿಗೆ ಕಳುಹಿಸಲಾಗಿತ್ತು.
ಹಿಂಸಾತ್ಮಕ ಪ್ರತಿಭಟನೆಯಲ್ಲಿ 22 ಪೊಲೀಸರು ಸೇರಿದಂತೆ 45 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
Advertisement