

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.
ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಮಿಲಿಟರಿ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಅಡೆತಡೆಯಿಲ್ಲದ ಸಂಚಾರ ಖಾತ್ರಿಯ ಅಗತ್ಯವನ್ನು ಉಭಯ ನಾಯಕರು ಹೇಳಿದ್ದಾರೆ.
ಹೆಚ್ಚಿದ ಪ್ರಾದೇಶಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ಈ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪ್ರಾದೇಶಿಕ ಅಸ್ಥಿರತೆಯಿಂದ ನಿರ್ಣಾಯಕ ಕಡಲ ಮಾರ್ಗಗಳ ಬಂದ್ ಗೆ ಕಾರಣವಾಗಿದ್ದು, ಜಾಗತಿಕ ಇಂಧನ ಸುರಕ್ಷತೆ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಜಾಗತಿಕ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖವಾದ ಮಾರ್ಗ ಆಗಿರುವ ಹಾರ್ಮುಜ್ ಜಲಸಂಧಿಯು ಭಾರತದ ಇಂಧನ ಆಮದುಗಳಿಗೆ ಹಾಗೂ ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ನಿರ್ಣಾಯಕವಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದ್ದೇನೆ. ಮುಂಚಿತವಾಗಿ ಈದ್ ಶುಭಾಶಯ ತಿಳಿಸಿದ್ದೇನ. ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ಪ್ರದೇಶದಲ್ಲಿ ಇತ್ತೀಚಿನ ದಾಳಿಗಳ ಬಗ್ಗೆ ಭಾರತದ ನಿಲುವನ್ನು ಪುನರುಚ್ಚರಿಸಿದ ಮೋದಿ, ಯುಎಇ ಮೂಲಸೌಕರ್ಯಗಳ ಮೇಲಿನ ಎಲ್ಲಾ ದಾಳಿಗಳ ಬಗ್ಗೆ ಭಾರತದ ತೀವ್ರ ಖಂಡನೆಯನ್ನು ಪುನರುಚ್ಚರಿಸಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರ ಖಾತರಿ ಪ್ರಾಮುಖ್ಯತೆಯನ್ನು ಒಪ್ಪಿಕೊಂಡಿದ್ದೇವೆ. ನಿರ್ಣಾಯಕ ಸಮುದ್ರ ಮಾರ್ಗಗಳನ್ನು ರಕ್ಷಿಸುವಲ್ಲಿ ನವದೆಹಲಿ ಮತ್ತು ಅಬುಧಾಬಿ ನಡುವೆ ಒಮ್ಮತ ಅಭಿಪ್ರಾಯವಿದೆ. ಯುದ್ಧದ ತೀವ್ರತೆ ಕಡಿಮೆ ಮಾಡಲು ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಮರುಸ್ಥಾಪಿಸಲು ಒಗ್ಗೂಡಿ ಕೆಲಸ ಮಾಡಲು ಬದ್ಧರಾಗಿದ್ದೇವೆ. ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ.
Advertisement