ಮಹಾ ಮಹಿಳಾ ಆಯೋಗದ ಅಧ್ಯಕ್ಷೆಯ ರಾಜೀನಾಮೆ ಸಿಎಂ ಫಡ್ನವೀಸ್ ಗೆ ರವಾನೆ: ಸುನೇತ್ರಾ ಪವಾರ್
ಮುಂಬೈ: ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರ ರಾಜೀನಾಮೆಯನ್ನು ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕಳುಹಿಸಿರುವುದಾಗಿ ಆಡಳಿತಾರೂಢ ಎನ್ಸಿಪಿ ಮುಖ್ಯಸ್ಥೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಶನಿವಾರ ಹೇಳಿದ್ದಾರೆ.
ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಬಗ್ಗೆ ವಿರೋಧ ಪಕ್ಷಗಳಿಂದ ಟೀವ್ರ ಟೀಕೆಗೆ ಗುರಿಯಾದ ನಂತರ ಚಕಂಕರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಎನ್ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್ ಅವರು ನಿನ್ನೆ ಸುನೇತ್ರಾ ಪವಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಅದಕ್ಕೂ ಮೊದಲು, ಚಕಂಕರ್ ಅವರು ಸಿಎಂ ಫಡ್ನವೀಸ್ ಅವರನ್ನು ಭೇಟಿಯಾಗಿದ್ದು, ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಪರಿಸ್ಥಿತಿ ಮತ್ತು ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಬಂಧನ, ಅವರ ವಿರುದ್ಧದ ಆರೋಪದ ಕುರಿತು ನಡೆಯುತ್ತಿರುವ ತನಿಖೆಯನ್ನು ಗಮನದಲ್ಲಿಟ್ಟುಕೊಂಡು ಚಕಂಕರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಸುನೇತ್ರಾ ಪವಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತನಿಖೆ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ ಪ್ರಕ್ರಿಯೆಗಾಗಿ ನಾನು ಅವರ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಕಳುಹಿಸಿದ್ದೇನೆ" ಎಂದು ಪವಾರ್ ಹೇಳಿದ್ದಾರೆ.

