

ದುಬೈ: ಇರಾನ್ ಮತ್ತು ಅಮೆರಿಕ ನಡುವೆ ಮತ್ತೆ ಸಂಘರ್ಷ ಭುಗಿಲೆದ್ದಿದ್ದು, ಯುಎಇನ ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಈ ವೇಳೆ ಮೂವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 8ರ ಕದನ ವಿರಾಮದ ನಂತರ ಇರಾನ್ನಿಂದ ಗಲ್ಫ್ ದೇಶಗಳಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಈ ದಾಳಿಯಲ್ಲಿ ಭಾರತೀಯರಿಗೆ ಗಾಯವಾದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ.
ಪಶ್ಚಿಮ ಏಷ್ಯಾದಾದ್ಯಂತ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಭಾರತ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.
'ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವುದು ಸ್ವೀಕಾರಾರ್ಹವಲ್ಲ. ನಾಗರಿಕ ಮೂಲಸೌಕರ್ಯ ಮತ್ತು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕರೆ ನೀಡುತ್ತೇವೆ’ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಖಂಡನೆ
ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ನಡೆದ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವುದು ದುಃಖಕರ ಎಂದು ಅವರು ತಿಳಿಸಿದ್ದಾರೆ.
“ಪೌರರು ಮತ್ತು ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಅಸ್ವೀಕಾರಾರ್ಹ,” ಎಂದು ಅವರು ‘X’ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಹೇಳಿದ್ದಾರೆ.
ಭಾರತವು ಯುಎಇಗೆ ದೃಢ ಬೆಂಬಲ ವ್ಯಕ್ತಪಡಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಸಂವಾದ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಪುನರುಚ್ಚರಿಸಿದೆ. Strait of Hormuz ಮೂಲಕ ಸುರಕ್ಷಿತ ಮತ್ತು ಅಡ್ಡಿಯಿಲ್ಲದ ಸಾಗಾಟವು ಪ್ರಾದೇಶಿಕ ಶಾಂತಿ, ಸ್ಥಿರತೆ ಹಾಗೂ ಜಾಗತಿಕ ಇಂಧನ ಭದ್ರತೆಗೆ ಅತ್ಯಂತ ಮುಖ್ಯವೆಂದು ಅವರು ಹೇಳಿದ್ದಾರೆ.
ಸಮುದ್ರ ಸಂಚಾರದಲ್ಲಿ ಬಿಗಿ ಭದ್ರತೆ
ಭಾರತದ ಇಂಧನ ಆಮದಿಗೆ ಅತ್ಯಂತ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ಅಡೆತಡೆಯಿಲ್ಲದ ಹಡಗು ಸಂಚಾರದ ಪ್ರಾಮುಖ್ಯತೆಯನ್ನು ನವದೆಹಲಿ ಒತ್ತಿಹೇಳಿದೆ.
ಗಾಯಗೊಂಡಿರುವ ಮೂವರು ಭಾರತೀಯರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು ನೀಡಲು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಈ ಘಟನೆಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಅಮೆರಿಕ ಮತ್ತು ಬ್ರಿಟನ್ ಸೇರಿದಂತೆ ಹಲವು ದೇಶಗಳು ಭಾರತ ಮತ್ತು ಯುಎಇಗೆ ಬೆಂಬಲ ಸೂಚಿಸಿವೆ.
Advertisement