

ಮುಂಬೈ: ಪಶ್ಚಿಮ ಬಂಗಾಳ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮಾತನ್ನು ಕೇಳದೆ ಮತ್ತು ಅವರೊಂದಿಗೆ ಮೈತ್ರಿ ಮಾತುಕತೆ ನಡೆಸದೆ "ದೊಡ್ಡ ತಪ್ಪು" ಮಾಡಿದ್ದಾರೆ. ಅವರ ಮಾತು ಕೇಳಿದ್ದರೆ ವಿಧಾನಸಭಾ ಚುನಾವಣಾ ಫಲಿತಾಂಶ ಬೇರೆಯೇ ಆಗಿರುತ್ತಿತ್ತು ಎಂದು ಶಿವಸೇನೆ-ಯುಬಿಟಿ ಸಂಸದ ಸಂಜಯ್ ರಾವತ್ ಮಂಗಳವಾರ ಹೇಳಿದ್ದಾರೆ.
207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಾಯಕ ಬಹುಮತವನ್ನು ಗಳಿಸಿದೆ. ಈ ಮೂಲಕ ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ನ 15 ವರ್ಷಗಳ ಆಡಳಿತ ಅಂತ್ಯಗೊಂಡಿದೆ.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವು ಪ್ರಜಾಪ್ರಭುತ್ವದ ಗೆಲುವಲ್ಲ. ಏಕೆಂದರೆ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಲಕ್ಷಾಂತರ ಮತದಾರರನ್ನು ಡಿಲೀಟ್ ಮಾಡಲಾಗಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ರಂತಹ ಪ್ರಮುಖ ವಿರೋಧ ಪಕ್ಷದ ನಾಯಕರ ಸೋಲಿನ ಹೊರತಾಗಿಯೂ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ಭವಿಷ್ಯವು ಉಜ್ವಲವಾಗಿದೆ ಎಂದು ಸೇನಾ-ಯುಬಿಟಿ ವಕ್ತಾರರು ತಿಳಿಸಿದ್ದಾರೆ.
"ಮಮತಾ ಬ್ಯಾನರ್ಜಿ ರಾಹುಲ್ ಗಾಂಧಿಯವರ ಮಾತನ್ನು ಕೇಳದೇ ದೊಡ್ಡ ತಪ್ಪು ಮಾಡಿದ್ದಾರೆ. ಅವರು ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿ(ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಜೊತೆ ಮೈತ್ರಿ ಕುರಿತು) ಚರ್ಚೆ ನಡೆಸಿದ್ದರೆ, ಫಲಿತಾಂಶ ಬೇರೆಯೇ ಇರುತ್ತಿತ್ತು" ಎಂದು ರಾವತ್ ಹೇಳಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ಒಮ್ಮೆ ಹೆಚ್ಚಿನ ರಾಜ್ಯಗಳನ್ನು ಗೆದ್ದಿದ್ದರು. ಆದರೆ ನಂತರ ಅವರು ಸೋಲನ್ನು ಅನುಭವಿಸಿದರು. ಬಿಜೆಪಿ ಕೂಡ ಈಗ ಉತ್ತುಂಗದಲ್ಲಿದೆ ಮತ್ತು ಭವಿಷ್ಯದಲ್ಲಿ ಸೋಲುತ್ತದೆ ಎಂದು ರಾವತ್ ತಿಳಿಸಿದರು.
Advertisement