

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ಕಾಂಗ್ರೆಸ್ ಬೆಂಬಲದೊಂದಿಗೆ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಆದರೆ ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವ ವಿಜಯ್ ಅವರು ಗುರುವಾರ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ಇಂದು ಬೆಳಗ್ಗೆ ಚೆನ್ನೈನ ಲೋಕಭವನಕ್ಕೆ ಆಗಮಿಸಿ, ಎರಡನೇ ಬಾರಿಗೆ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಮತ್ತೊಮ್ಮೆ ಹಕ್ಕು ಮಂಡಿಸಿದರು. ಈ ವೇಳೆ ಟಿವಿಕೆ ಹಿರಿಯ ನಾಯಕರು ವಿಜಯ್ ಅವರೊಂದಿಗೆ ಇದ್ದರು.
ಇಂದು ರಾಜ್ಯಪಾಲರೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸಿದ ವಿಜಯ್ ಅವರು ಟಿವಿಕೆ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಆದರೆ ರಾಜ್ಯಪಾಲರು ಸರ್ಕಾರ ರಚಿಸಲು ಬೇಕಾದ ಸಂಖ್ಯಾಬಲ ನಿಮ್ಮ ಬಳಿ ಇದೇಯೇ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಇರುವ ಪತ್ರವನ್ನು ಸಲ್ಲಿಸಬೇಕೆಂದು ರಾಜ್ಯಪಾಲರುಸ ವಿಜಯ್ ಅವರಿಗೆ ಸೂಚಿಸಿದ್ದಾರೆ. ವಿಜಯ್ ಅವರೊಂದಿಗಿನ ಚರ್ಚೆಯ ಸಮಯದಲ್ಲಿ, ಸರ್ಕಾರ ರಚಿಸಲು ಮುಂದಾಗುವ ಪಕ್ಷವು ಬಹುಮತವನ್ನು ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಲು ವಿಫಲವಾದ ರಾಜ್ಯಪಾಲರನ್ನು ನ್ಯಾಯಾಲಯಗಳು ತರಾಟೆಗೆ ತೆಗೆದುಕೊಂಡಿರುವ ಹಿಂದಿನ ಘಟನೆಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಆರ್ಎಲ್ ಸುಂದರೇಶನ್ ಅವರಿಂದ ಕಾನೂನು ಸಲಹೆ ಪಡೆದ ನಂತರ ಟಿವಿಕೆಯನ್ನು ಸರ್ಕಾರ ರಚಿಸಲು ಆಹ್ವಾನಿಸದಿರಲು ರಾಜ್ಯಪಾಲರು ನಿರ್ಧಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಟಿವಿಕೆ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
ತಿರುಚಿರಾಪಳ್ಳಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರಗಳಿಂದ ಗೆದ್ದ ವಿಜಯ್, ಬುಧವಾರ ಟಿವಿಕೆಗೆ ಔಪಚಾರಿಕವಾಗಿ ಬೆಂಬಲ ನೀಡಿದ ಐದು ಕಾಂಗ್ರೆಸ್ ಶಾಸಕರು ಸೇರಿದಂತೆ 113 ಶಾಸಕರ ಬೆಂಬಲ ಪತ್ರಗಳನ್ನು ಸಲ್ಲಿಸಿದ್ದರು. ಇನ್ನೂ ಐದು ಶಾಸಕರ ಬೆಂಬಲ ಅಗತ್ಯ ಇದೆ.
ಆದಾಗ್ಯೂ, 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 118 ಶಾಸಕರ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ರಾಜ್ಯಪಾಲರು ವಿಜಯ್ ಅವರಿಗೆ ತಿಳಿಸಿದ್ದು, ಹೆಚ್ಚುವರಿ ಬೆಂಬಲದೊಂದಿಗೆ ಬರುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
Advertisement