

ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಶನಿವಾರ ತಮ್ಮ ದೀರ್ಘಕಾಲದ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಸೌಜನ್ಯಕ್ಕಾದರೂ ಧನ್ಯವಾದ ಹೇಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 23ರಂದು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಒಂದೇ ದಿನದಲ್ಲಿ ತಮ್ಮ ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡಿತು. ಮೈತ್ರಿಕೂಟದ ಭಾಗವಾಗಿ ಗೆದ್ದ ಕಾಂಗ್ರೆಸ್ ಶಾಸಕರು ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಕೃತಜ್ಞತೆ ಸಲ್ಲಿಸಲು ಪಕ್ಷದ ಪ್ರಧಾನ ಕಚೇರಿಗೆ ಬರಲಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.
ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಲು ಮತ್ತು ತಮಿಳರ ಕಲ್ಯಾಣಕ್ಕಾಗಿ ಡಿಎಂಕೆ ಜೊತೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ ಕಮ್ಯುನಿಸ್ಟ್ ಪಕ್ಷಗಳು ಮತ್ತು ವಿಸಿಕೆ ಅನ್ನು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಅವರು ಶ್ಲಾಘಿಸಿದ್ದಾರೆ.
“ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ನೀವು ನಡೆಯುತ್ತಿರುವ ಘಟನೆಗಳನ್ನು ನೋಡುತ್ತಿದ್ದೀರಿ. ವಿಧಾನಸಭಾ ಚುನಾವಣಾ ಫಲಿತಾಂಶ ಯಾವುದೇ ಪಕ್ಷಕ್ಕೆ ಸರ್ಕಾರ ರಚಿಸಲು ಬಹುಮತ ಸಿಗದ ರೀತಿಯಲ್ಲಿ ಬಂದಿದೆ” ಎಂದು ಸ್ಟಾಲಿನ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟವು ಸರ್ಕಾರ ರಚಿಸಲು ಬೇಕಾದ ಸ್ಥಾನಗಳನ್ನು ಗಳಿಸಲಿಲ್ಲ. ಆದರೆ ನಾವು ಗಮನಾರ್ಹ ಸಂಖ್ಯೆಯ ಮತಗಳನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಅವರು, “ಹೊಸ ಸರ್ಕಾರ ರಚನೆಗೆ ನಾವು ಅಡ್ಡಿಯಾಗುವುದಿಲ್ಲ ಮತ್ತು ಡಿಎಂಕೆ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಾನು ಈಗಾಗಲೇ ಹೇಳಿದ್ದೇನೆ” ಎಂದರು.
ಸಿಪಿಐ, ಸಿಪಿಐ(ಎಂ) ಹಾಗೂ ವಿಸಿಕೆ ಪಕ್ಷಗಳು ಸರ್ಕಾರ ರಚಿಸಲು ವಿಜಯ್ ಅವರಿಗೆ ಬೆಂಬಲ ನೀಡಿದ್ದರೂ ಸೈದ್ಧಾಂತಿಕವಾಗಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿ ಮುಂದುವರೆಯುವುದಾಗಿ ಹೇಳಿವೆ. ಅವರ ಈ ನಿರ್ಧಾರ ಮತ್ತು ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ.
Advertisement