

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಸೋಲು ಅನುಭವಿಸಿದ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.
ಈ ನಡುವೆ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕೊಲ್ಕತ್ತಾದ ಕಾಳಿಘಾಟ್ನಲ್ಲಿ ನಡೆದ ಟಿಎಂಸಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಎದುರಿಸಿದ ಹಿನ್ನಡೆಯ ನಡುವೆಯೂ ಪಕ್ಷ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯನ್ನು ದೆಹಲಿಯಿಂದ ಅಧಿಕಾರದಿಂದ ದೂರ ಮಾಡುವ ದಿನಗಳು ದೂರದಲ್ಲಿಲ್ಲ ಎಂದು ಹೇಳಿದ್ದಾರೆ.
ಸಭೆಯಲ್ಲಿ ಹಾಜರಿದ್ದ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಏನೇ ಆಗಲಿ, ಬಿಜೆಪಿಯ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ಮನೆ ಧ್ವಂಸ ಮಾಡಿದರೂ, ನೋಟಿಸ್ ಕಳುಹಿಸಿದರೂ ನಾನು ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧವೂ ಪರೋಕ್ಷ ವಾಗ್ದಾಳಿ ನಡೆಸಿದ ಅವರು. “ಈ ರಾಜ್ಯದಲ್ಲಿ ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇವೆ. ಆದರೆ, ಇಂತಹ ಮುಖ್ಯಮಂತ್ರಿ ಯಾರೂ ಇರಲಿಲ್ಲ. ಕ್ಯಾಮೆರಾ ಮುಂದೆ ಹಣ ಸ್ವೀಕರಿಸುತ್ತಿರುವ ದೃಶ್ಯ ಕಂಡ ವ್ಯಕ್ತಿಯನ್ನೇ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದ್ದು, ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಟಿಎಂಸಿಗೆ ಭಾರೀ ಹೊಡೆತ ನೀಡಿದೆ. ಟಿಎಂಸಿ ಕೇವಲ 80 ಸ್ಥಾನಗಳಿಗೆ ಸೀಮಿತವಾಗಿದೆ.
ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಹಿಂಸಾಚಾರ, ದಾಳಿ ಹಾಗೂ ಟಿಎಂಸಿ ಕಚೇರಿಗಳ ಮೇಲೆ ದಾಳಿ ನಡೆದ ಘಟನೆಗಳೂ ನಡೆದಿವೆ.
ಈ ಹಿನ್ನೆಲೆಯಲ್ಲಿ ಟಿಎಂಸಿ ಪಕ್ಷ ಕೋಲ್ಕತಾ ಹೈಕೋರ್ಟ್ ಮೊರೆ ಹೋಗಿದ್ದು, ಚುನಾವಣೋತ್ತರ ಹಿಂಸಾಚಾರದ ಕುರಿತು ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸುವಂತೆ ಮನವಿ ಮಾಡಿದೆ.
ಈ ಸಂಬಂಧ ಮೇ 14ರಂದು ಮಮತಾ ಬ್ಯಾನರ್ಜಿ ವಕೀಲರ ಉಡುಪು ಧರಿಸಿ ಸ್ವತಃ ಕೋಲ್ಕತ್ತಾ ಹೈಕೋರ್ಟ್ಗೆ ಹಾಜರಾಗಿದ್ದು ಗಮನಸೆಳೆದಿತ್ತು.
ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರ ಮುಂದೆ ವಿಚಾರಣೆಗೆ ಹಾಜರಾದ ಮಮತಾ, ರಾಜ್ಯದಲ್ಲಿ ಟಿಎಂಸಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದ್ದು, ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು,
ಇನ್ನೊಂದೆಡೆ, ಬಿಜೆಪಿ ಹಾಗೂ ಟಿಎಂಸಿ ಎರಡೂ ಪಕ್ಷಗಳು ಪರಸ್ಪರ ಹಿಂಸಾಚಾರದ ಆರೋಪಗಳನ್ನು ಮಾಡುತ್ತಿದ್ದು, ಕೊಲ್ಕತ್ತಾ, ಹೌರಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಟಿಎಂಸಿ ನಾಯಕರು ತಮ್ಮ ಪಕ್ಷದ ಹಲವಾರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ ಎಂದು ಆರೋಪಿಸಿದ್ದು, ನ್ಯಾಯಾಲಯದ ಮೇಲ್ವಿಚಾರಣೆಯಲ್ಲೇ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
Advertisement