

ನವದೆಹಲಿ: ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ಸೇನಾಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಬಗ್ಗೆ ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸಶಸ್ತ್ರ ಸೀಮಾ ಬಲ್(ಎಸ್ಎಸ್ಬಿ)ನ ಹೆಡ್ ಕಾನ್ಸ್ಟೆಬಲ್ ದೀಪಕ್ ಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಚಲನಚಿತ್ರವು ಕಾಲ್ಪನಿಕ ಕಥೆಯಾಗಿರಬಹುದು. ಆದರೆ ಭದ್ರತಾ ಪಡೆ ಸಿಬ್ಬಂದಿ ಎತ್ತಿರುವ ಕಳವಳಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.
'ಧುರಂಧರ್' ಸಿನಿಮಾ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ದೇಶದ ಭದ್ರತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಧುರಂಧರ್: ದಿ ರಿವೆಂಜ್ ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ(ಸಿಬಿಎಫ್ಸಿ) ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ವಿಭಾಗೀಯ ಪೀಠವು, ಈ ವಿಷಯವನ್ನು ಪರಿಗಣಿಸಿ, ದೀಪಕ್ ಕುಮಾರ್ ಅವರ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ(ಎಂಐಬಿ) ಮತ್ತು ಸಿಬಿಎಫ್ಸಿಗೆ ಸೂಚಿಸಿದೆ.
Advertisement