

ಚೆನ್ನೈ: ತಮಿಳಗ ವೆಟ್ರಿ ಕಳಗಂ ಸ್ಥಾಪಕ ಮತ್ತು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮತ್ತಿತರರಿಗೆ ನೋಟಿಸ್ ನೀಡಲು ಮದ್ರಾಸ್ ಹೈಕೋರ್ಟ್ ಗುರುವಾರ ಆದೇಶಿಸಿದೆ.
2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಮಕ್ಕಳ ಬಳಕೆ ಸೇರಿದಂತೆ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ಹೈಕೋರ್ಟ್ ಈ ಆದೇಶ ನೀಡಿದೆ.
ಈ ಸಂಬಂಧ ಕಡಲೂರು ಜಿಲ್ಲೆಯ ವಕೀಲ ಎಲ್ ವಾಸುಕಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಿ ಆರ್ ಸ್ವಾಮಿನಾಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರನ್ನೊಳಗೊಂಡ ರಜಾ ಪೀಠ, ಭಾರತದ ಚುನಾವಣಾ ಆಯೋಗ, ತಮಿಳುನಾಡು ಮುಖ್ಯ ಚುನಾವಣಾಧಿಕಾರಿ, ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಪೀಠವು ಮೇ 29 ಕ್ಕೆ ಮುಂದೂಡಿದೆ.
ಏಪ್ರಿಲ್ 21, 2026 ರಂದು ಚೆನ್ನೈನ ವೈಎಂಸಿಎ ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಪೋಷಕರನ್ನು ಮಕ್ಕಳು ಮನವೊಲಿಸಬೇಕು ಎಂದು ಟಿವಿಕೆ ಸಂಸ್ಥಾಪಕ ವಿಜಯ್ ಭಾಷಣ ಮಾಡಿದ್ದರು ಎಂದು ವಾಸುಕಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಈ ಭಾಷಣವು ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಅಪ್ರಾಪ್ತ ಮಕ್ಕಳನ್ನು ಚುನಾವಣಾ ಪ್ರಭಾವದ ಸಾಧನಗಳಾಗಿ ಬಳಸುವ ಬಗ್ಗೆ ಸಾರ್ವಜನಿಕ ಚರ್ಚೆಗೂ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.
ವಿಜಯ್ ಭಾಷಣದ ನಂತರ ಮತದಾನ ಮಾಡುವ ಬಗ್ಗೆ ಮಕ್ಕಳು ಪೋಷಕರ ಮೇಲೆ ಭಾವನಾತ್ಮಕವಾಗಿ ಒತ್ತಡ ಹೇರುತ್ತಿರುವುದನ್ನು ತೋರಿಸುವ ಹಲವಾರು ವೀಡಿಯೊ, ಫೋಟೋಗಳು ಕೂಡಾ ವೈರಲ್ ಆಗಿದ್ದವು. ಇದು 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 ಚುನಾವಣಾ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಸೇರಿದಂತೆ ಭ್ರಷ್ಟಚಾರವನ್ನು ವ್ಯಾಖ್ಯಾನಿಸುತ್ತದೆ. ಈ ಆರೋಪಗಳ ಬಗ್ಗೆ ಇಸಿಐ ಮತ್ತು ಸಿಇಒ ತಕ್ಷಣ ಪರಿಶೀಲಿಸಬೇಕು ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೇ 2026 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ತಮಿಳುನಾಡಿನ ಹಲವಾರು ಕ್ಷೇತ್ರಗಳಲ್ಲಿ ವೋಟಿಗಾಗಿ ನೋಟು ಹಂಚಿಕೆಗೆ ಸಂಬಂಧಿಸಿದಂತೆ ವ್ಯಾಪಕ ಆರೋಪಗಳಿವೆ. ಮೈಲಾಪುರ, ಆಲಂಗುಲಂ ಮತ್ತು ತಿರುಮಂಗಲಂ ಸೇರಿದಂತೆ ಕ್ಷೇತ್ರಗಳಲ್ಲಿ ಚುನಾವಣಾ ಲಂಚ ಮತ್ತು ಮತದಾರರಿಗೆ ಹಣ ವಿತರಣೆಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಮತ್ತು ಮಾಧ್ಯಮ ವರದಿಗಳು ಬಂದಿವೆ. ಮತದಾರರಿಗೆ ನಗದು ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಪ್ರತಿಭಟನೆಗಳು ನಡೆದಿರುವ ಬಗ್ಗೆ ವರದಿಗಳು ಬಂದಿವೆ ಎಂದು ಅವರು ಹೇಳಿದ್ದಾರೆ.
Advertisement