

ಚೆನ್ನೈ: ತಮಿಳುನಾಡಿನ ಮನವಿಯನ್ನು ಪರಿಗಣಿಸದೆ, ಮೇಕೆದಾಟು ಯೋಜನೆಗಾಗಿ ಕರ್ನಾಟಕದ ಪ್ರಸ್ತಾವನೆಯನ್ನು ಜಲಶಕ್ತಿ ಸಚಿವಾಲಯ ಮತ್ತು ಸಿಡಬ್ಲ್ಯುಸಿ ಪರಿಗಣಿಸಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಗಳವಾರ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸಿದ್ಧಪಡಿಸಿದ ಡಿಪಿಆರ್ ಅನ್ನು ತಿರಸ್ಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ವಿನಂತಿಸಿದ್ದಾರೆ. ಏಕೆಂದರೆ, ಇದು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿದೆ ಎಂದಿದ್ದಾರೆ.
ಅಲ್ಲದೆ, ಸಹ-ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸದಂತೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಾಣದ 'ಭೂಮಿ ಪೂಜೆ' ಘೋಷಣೆ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನು ಅವಲಂಬಿಸಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಕಳವಳವನ್ನುಂಟುಮಾಡಿದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ವಿಜಯ್ ಹೇಳಿದ್ದಾರೆ.
'ಸುಮಾರು ಮೂರು ದಶಕಗಳ ಕಾಲ ನಡೆದ ಸುದೀರ್ಘ ಕಾನೂನು ಹೋರಾಟದ ನಂತರ ಸೂಕ್ಷ್ಮ ಕಾವೇರಿ ನೀರಿನ ವಿವಾದಕ್ಕೆ ಪರಿಹಾರ ಸಿಕ್ಕಿದ್ದು, 2018ರ ಫೆಬ್ರುವರಿ 16ರಂದು ನೀಡಿದ ತೀರ್ಪು ಜಾರಿಯಲ್ಲಿದೆ ಎಂಬುದು ನಿಮಗೂ ಚೆನ್ನಾಗಿ ತಿಳಿದಿರಬಹುದು' ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Advertisement