

ಮುಂಬೈ: ಪುಣೆ ಸಮೀಪದ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ವಾನ್ವಾಡಿ ಪ್ರದೇಶದಲ್ಲಿ ಗುರುವಾರ ಕೆಲವರು ನಕಲಿ ಮದ್ಯ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಅವರಲ್ಲಿ ಎಂಟು ಮಂದಿ ಅದೇ ದಿನ ಸಾವನ್ನಪ್ಪಿದ್ದು, ಶುಕ್ರವಾರ ಬೆಳಗ್ಗೆ ಇನ್ನೂ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಅಕ್ರಮ ಮದ್ಯ ಸೇವಿಸಿದ ಬಳಿಕ ಹಲವರಿಗೆ ಉಸಿರಾಟದ ತೊಂದರೆ ಮತ್ತು ಪ್ರಜ್ಞಾಹೀನ ಸ್ಥಿತಿ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಕೆಲವರು ಮೃತಪಟ್ಟಿದ್ದರು ಎನ್ನಲಾಗಿದೆ.
ಸ್ಥಳೀಯ ಅಧಿಕಾರಿಗಳ ಪ್ರಕಾರ, ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ನಕಲಿ ಮದ್ಯ ಮಾರಾಟ ಜಾಲ ಸಕ್ರಿಯವಾಗಿದ್ದು, ಸಾವನ್ನಪ್ಪಿದ 11 ಮಂದಿ ಯೋಗೇಶ್ ವಾಂಖೆಡೆ ಎಂಬಾತನ ಸ್ಥಳದಲ್ಲಿ ಮದ್ಯ ಸೇವಿನೆ ಮಾಡಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ನಡುವೆ ಎನ್ಸಿಪಿ ನಾಯಕ ಯೋಗೇಶ್ ಬಹಾಲ್ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
ಪೊಲೀಸರು ಮತ್ತು ಅಧಿಕಾರಿಗಳ ಸಹಕಾರದಿಂದಲೇ ಅಕ್ರಮ ಮತ್ತು ಕಲಬೆರಕೆ ಮದ್ಯ ಮಾರಾಟ ಬಹಿರಂಗವಾಗಿ ನಡೆಯುತ್ತಿದೆ. ಈ ದಂಧೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆದರೆ, ಪೊಲೀಸರು ಸಾವಿಗೆ ನಕಲಿ ಮದ್ಯವೇ ನೇರ ಕಾರಣ ಎಂದು ಇನ್ನೂ ದೃಢಪಡಿಸಿಲ್ಲ. ತೀವ್ರ ಬಿಸಿಲು ಅಥವಾ ಇತರೆ ಆರೋಗ್ಯ ಸಮಸ್ಯೆಗಳೂ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ರವಾನಿಸಲಾಗಿದ್ದು, ಮರಣೋತ್ತರ ವರದಿ ಬಂದ ಬಳಿಕವೇ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.
Advertisement