

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಂತ್ರಸ್ತರ ಭೇಟಿ ವೇಳೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ್ ಪ್ರದೇಶದಲ್ಲಿ ಶನಿವಾರ ನಡೆದ ಘಟನೆಯೊಂದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಚುನಾವಣೋತ್ತರ ಹಿಂಸಾಚಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ಚುನಾವಣೋತ್ತರ ಹಿಂಸಾಚಾರದಿಂದ ಬಾಧಿತ ಕುಟುಂಬಗಳನ್ನು ಭೇಟಿ ಮಾಡಲು ಬ್ಯಾನರ್ಜಿ ಸೋನಾರ್ಪುರ್ಗೆ ತೆರಳಿದ್ದರು. ಈ ವೇಳೆ ಗುರುತಿಸಲಾಗದ ಕೆಲವರು ಅವರ ವಿರುದ್ಧ ಪ್ರತಿಭಟನೆ ನಡೆಸಿ, ಕಲ್ಲು, ಮೊಟ್ಟೆ ಹಾಗೂ ಚಪ್ಪಲಿಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನಾಕಾರರು ಮಾಜಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧ "ಕಳ್ಳರು" ಎಂದು ಘೋಷಣೆಗಳನ್ನು ಕೂಗಿದರೆಂದು ವರದಿಯಾಗಿದೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಯಂತೆ, ಪರಿಸ್ಥಿತಿ ಕೆಲವೇ ಕ್ಷಣಗಳಲ್ಲಿ ಉದ್ವಿಗ್ನಗೊಂಡಿದ್ದು, ಕೆಲವರು ಅಭಿಷೇಕ್ ಬ್ಯಾನರ್ಜಿ ಅವರನ್ನು ತಳ್ಳಾಡಿ, ಹೊಡೆದು, ಒದೆಯಲು ಪ್ರಯತ್ನಿಸಿದರು ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಹಾಗೂ ಪಕ್ಷದ ಕಾರ್ಯಕರ್ತರು ಮಧ್ಯಪ್ರವೇಶಿಸಿ ಅವರನ್ನು ಸ್ಥಳದಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ದರು.
ಹೆಲ್ಮೆಟ್ ಧರಿಸಿ ಪರಾರಿ
ಸಾಮಾಜಿಕ ಜಾಲತಾಣಗಳು ಮತ್ತು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ ಬ್ಯಾನರ್ಜಿ ಅವರು ಪೊಲೀಸ್ ಹೆಲ್ಮೆಟ್ ಧರಿಸಿ ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಅವರ ಅಂಗಿ ಹರಿದಿರುವುದು ಘಟನೆಯ ತೀವ್ರತೆಯನ್ನು ತೋರಿಸಿತು.
ಪೊಲೀಸರು-ಸರ್ಕಾರದ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಆಕ್ರೋಶ
ಘಟನೆಗೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಭಿಷೇಕ್ ಬ್ಯಾನರ್ಜಿ, ಇದು ಪೂರ್ವನಿಯೋಜಿತ ದಾಳಿ ಎಂದು ಆರೋಪಿಸಿದರು. ಸ್ಥಳದಲ್ಲಿ ಸಮರ್ಪಕ ಪೊಲೀಸ್ ಭದ್ರತೆ ಇರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೋತ್ತರ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬವನ್ನು ಭೇಟಿ ಮಾಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಕಾರ್ಯವೈಖರಿಯನ್ನು ಪ್ರಶ್ನಿಸಿದರು.
“ನನ್ನ ಸ್ಥಿತಿ ಹೇಗಾಗಿದೆ ನೋಡಿ. ಇದು ಪೂರ್ವಯೋಜಿತ ದಾಳಿ. ಇಲ್ಲಿ ಪೊಲೀಸ್ ಭದ್ರತೆಯೇ ಇಲ್ಲ. ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಸ್ಥಳೀಯ ಪೊಲೀಸರು ತಮ್ಮ ಪಡೆಗಳನ್ನು ಕಳುಹಿಸಿ ಸಂತ್ರಸ್ತರ ಕುಟುಂಬಗಳಿಗೆ ರಕ್ಷಣೆ ಒದಗಿಸುವವರೆಗೆ ನಾನು ಇಲ್ಲಿಂದ ತೆರಳುವುದಿಲ್ಲ,” ಎಂದು ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಯಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಲು ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಆರೋಪಗಳು ಇನ್ನೂ ರಾಜಕೀಯ ವಿವಾದದ ಕೇಂದ್ರಬಿಂದುವಾಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆಡಳಿತಾರೂಢ ಟಿಎಂಸಿ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಸಂಘರ್ಷಕ್ಕೆ ಇದು ಮತ್ತಷ್ಟು ಪುಷ್ಟಿ ತುಂಬಿದೆ.
ಶನಿವಾರ ನಡೆದ ಘಟನೆಯ ತನಿಖೆ ಮುಂದುವರಿದಿದ್ದು, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸುವ ಸಾಧ್ಯತೆಯಿದೆ.
Advertisement