

ನವದೆಹಲಿ: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಭಾನುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ನೌಕಾಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ನಿವೃತ್ತಿಯಾದ ಹಿನ್ನೆಲೆಯಲ್ಲಿ ಕೃಷ್ಣ ಸ್ವಾಮಿನಾಥನ್ ಅವರಿಗೆ ಈ ಮಹತ್ವದ ಜವಾಬ್ದಾರಿ ಒಪ್ಪಿಸಲಾಗಿದೆ.
ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು ಅವರು ಪಶ್ಚಿಮ ನೌಕಾ ಕಮಾಂಡ್ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು, ದೇಶದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಭಾರತೀಯ ನೌಕಾಪಡೆ ಸದಾ ಸಜ್ಜಾಗಿದ್ದು, ಪ್ರಸ್ತುತ ಸಂಕೀರ್ಣ ಮತ್ತು ಅನಿಶ್ಚಿತ ಭದ್ರತಾ ಪರಿಸ್ಥಿತಿಯ ನಡುವೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
“ದೇಶದ ಭದ್ರತೆ ಹಾಗೂ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸನ್ನದ್ಧತೆ ಮತ್ತು ಯುದ್ಧ ಸಾಮರ್ಥ್ಯವನ್ನು ಅತ್ಯುನ್ನತ ಮಟ್ಟದಲ್ಲಿ ಕಾಯ್ದುಕೊಳ್ಳುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ತಿಳಿಸಿದರು.
ಇದೇ ವೇಳೆ ನೌಕಾಪಡೆಯ ಆಧುನೀಕರಣ ಮತ್ತು ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದ ಅವರು, ಹೊಸ ತಂತ್ರಜ್ಞಾನಗಳ ಸೇರ್ಪಡೆ ಮೂಲಕ ಕಾರ್ಯಾಚರಣಾ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದರು.
ಭಾರತೀಯ ನೌಕಾಪಡೆಯ ಬೆಳವಣಿಗೆಯ ವೇಗವನ್ನು ಮುಂದುವರಿಸುವುದು, ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸಾಮರ್ಥ್ಯ ವಿಸ್ತರಣೆ ಮಾಡುವುದು ನನ್ನ ಪ್ರಮುಖ ಗುರಿಯಾಗಿರುತ್ತದೆ ಎಂದೂ ಹೇಳಿದರು.
Advertisement