

ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್ಐಆರ್ ಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದ ನಂತರ, ದೆಹಲಿಯಲ್ಲಿ ಸೆಪ್ಟೆಂಬರ್ 5 ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಹಿಂಪಡೆದಿದೆ.
ಇಂಡಿಯಾ ಗೇಟ್ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ನೀಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.
ಜುಲೈ 20 ರಿಂದ ಜುಲೈ 25 ರ ನಡುವೆ ದೇಶದ ಹಲವಾರು ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ ಗೆ ತಿಳಿಸಿದ ನಂತರ ಸಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ.
ವಿಚಾರಣೆಯ ಸಮಯದಲ್ಲಿ, ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಹಲವಾರು ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. ಆದಾಗ್ಯೂ, ಗಂಭೀರ ಕ್ರಿಮಿನಲ್ ಅಪರಾಧಗಳ ಆರೋಪಗಳನ್ನು ಒಳಗೊಂಡ ಪ್ರಕರಣಗಳಲ್ಲಿ ನಿಯಮಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿತು.
ಅಪರಾಧ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿವರಗಳನ್ನು ಒಳಗೊಂಡ ದೆಹಲಿ ಪೊಲೀಸ್ (Delhi Police) ಅರ್ಜಿಯನ್ನು ಉಲ್ಲೇಖಿಸಿದ ತುಷಾರ್ ಮೆಹ್ತಾ ಅವರು, ಅಂತಹ ಕಿಡಿಗೇಡಿಗಳ ವಿರುದ್ಧ ಹೊಸದಾಗಿ ಎಫ್ಐಆರ್ (FIR) ದಾಖಲಿಸಲಾಗುವುದು ಎಂದರು.