ತ್ರಿಶೂರ್‌ನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಮಿಳು ನಾಡಿನ 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು; Video

ಪನಂಬಿಕ್ಕುನ್ನು ಸೆಂಟರ್‌ನಲ್ಲಿ ಈ ದಾರುಣ ಅಪಘಾತ ಸಂಭವಿಸಿದ್ದು, ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
Major accident in Trissur kerala
ಕೇರಳಂನ ತ್ರಿಶೂರ್ ನಲ್ಲಿ ಭೀಕರ ಅಪಘಾತ
Updated on

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂನಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ನಿಂತಿದ್ದ ಸರಕು ಸಾಗಣೆ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪನಂಬಿಕ್ಕುನ್ನು ಸೆಂಟರ್‌ನಲ್ಲಿ ಈ ದಾರುಣ ಅಪಘಾತ ಸಂಭವಿಸಿದ್ದು, ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಕಳೆದ ರಾತ್ರಿ 11.42ರ ಸುಮಾರಿಗೆ ಅಪಘಾತ ಸಂಭವಿಸಿದೆ. ತಮಿಳುನಾಡು ನೋಂದಣಿ ಹೊಂದಿದ್ದ ಕಾರು ನಿಯಂತ್ರಣ ಕಳೆದುಕೊಂಡು ವೇಗವಾಗಿ ಲಾರಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದ ಸ್ಥಳದ ಸಮೀಪ ಭಾರಿ ವಾಹನವನ್ನು ನಿಲ್ಲಿಸಲಾಗಿತ್ತು.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರ ಮುಂಭಾಗ ಲಾರಿಯ ಕೆಳಗೆ ಸಂಪೂರ್ಣವಾಗಿ ಸಿಲುಕಿಕೊಂಡಿತ್ತು.

ದೊಡ್ಡ ಪ್ರಮಾಣದಲ್ಲಿ ಶಬ್ದ ಕೇಳಿದ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಪ್ರಯಾಣಿಕರನ್ನು ಹೊರತೆಗೆಯಲು ಕಾರನ್ನು ಕತ್ತರಿಸಿ ತೆರೆಯಬೇಕಾಯಿತು. ವಿಶೇಷವಾಗಿ ಮುಂಭಾಗದ ಆಸನಗಳಲ್ಲಿ ಸಿಲುಕಿದ್ದವರನ್ನು ಹೊರತೆಗೆಯುವುದು ರಕ್ಷಣಾ ಸಿಬ್ಬಂದಿಗೆ ಸವಾಲಿನ ಕೆಲಸವಾಗಿತ್ತು. ಅಪಘಾತದ ತೀವ್ರತೆಯನ್ನು ಇದು ತೋರಿಸುತ್ತದೆ. ಕಾರಿನಲ್ಲಿದ್ದ ಎಲ್ಲ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ತಮಿಳುನಾಡಿನ ಯುವಕರು. ಐವರು ಮೃತರನ್ನು ಗುರುತಿಸಲಾಗಿದೆ. ಸೇಲಂನ ವಿಶ್ವ, ದಿಂಡಿಗಲ್‌ನ ಸೂರ್ಯ ಮತ್ತು ಯುವ ಸಂಜಿತ್ ಹಾಗೂ ಮಧುರೈನ ಸಂತೋಷ್ ಮತ್ತು ಪ್ರಸನ್ನ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಮೂವರು ಪ್ರಯಾಣಿಕರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

ಗುರುತಿಸಲಾದ ಮೃತರ ಕುಟುಂಬಗಳಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಯುವಕರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.

ಕೈಪಮಂಗಲಂ ಪೊಲೀಸರು ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿ ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

Major accident in Trissur kerala
ಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್‌; ತಪ್ಪಿದ ಭಾರೀ ದುರಂತ, Video

ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಇದೇ ವೇಳೆ, ಹೆದ್ದಾರಿಯಲ್ಲಿ ಸೂಕ್ತ ಬೀದಿ ದೀಪಗಳ ಕೊರತೆ ಹಾಗೂ ಎಚ್ಚರಿಕೆ ಫಲಕಗಳಿಲ್ಲದಿರುವುದೇ ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾತ್ರಿ ವೇಳೆ ಈ ಪ್ರದೇಶದಲ್ಲಿ ಅಪಘಾತಗಳು ಸಾಮಾನ್ಯವಾಗಿವೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದ್ದರೂ, ಸೂಕ್ತ ಸೂಚನಾ ಫಲಕಗಳ ಕೊರತೆಯಿಂದ ದೂರದ ಪ್ರದೇಶಗಳಿಂದ ಬರುವ ವಾಹನ ಚಾಲಕರು ಗೊಂದಲಕ್ಕೊಳಗಾಗುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅತಿವೇಗವು ಅಪಘಾತಕ್ಕೆ ಕಾರಣವಾಗಿದೆಯೇ ಎಂಬುದನ್ನು ತಿಳಿಯಲು ಪೊಲೀಸರು ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದ್ದು, ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿದ್ದಾರೆ. ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಕೂಡ ಅಪಘಾತದ ಸ್ಥಳವನ್ನು ಪರಿಶೀಲಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com