

ನವದೆಹಲಿ: ರಾಜಧಾನಿ ದೆಹಲಿಯ ಸತ್ಯ ನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದ ಪರಿಣಾಮ ಇದುವರೆಗೆ 6 ಮಂದಿ ಮೃತಪಟ್ಟಿದ್ದು, 11 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 50 ವರ್ಷ ಹಳೆಯ ಕಟ್ಟಡ ಏಕಾಏಕಿ ಕುಸಿದಿದೆ.
ಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಕಟ್ಟಡ ಕುಸಿತದ ಬಳಿಕ ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ತುರ್ತು ಸಿಬ್ಬಂದಿ ರಾತ್ರಿಯಿಡೀ ಶೋಧ ನಡೆಸಿದ್ದಾರೆ.
ಸುಮಾರು 200 ತುರ್ತು ಸಿಬ್ಬಂದಿ ಆರಂಭಿಕ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸತ್ಯ ನಿಕೇತನದ ಕಿರಿದಾದ ಹಾಗೂ ಜನನಿಬಿಡ ರಸ್ತೆಗಳಾಗಿದ್ದು, ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿರುವವರನ್ನು ತಲುಪಲು ರಕ್ಷಣಾ ತಂಡಗಳಿಗೆ ಮತ್ತಷ್ಟು ಸವಾಲು ತಂದೊಡ್ಡಿವೆ.
ಕಟ್ಟಡ ಕುಸಿತಕ್ಕೆ ಕಾರಣವೇನು?
ನೆಲಮಾಳಿಗೆಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಕಟ್ಟಡ ಕುಸಿದಿದೆ. ಹಲವು ದಿನಗಳಿಂದ ಸುರಿದ ಮಳೆಯಿಂದ ನೆಲಮಾಳಿಗೆಯಲ್ಲಿ ನೀರು ಸಂಗ್ರಹವಾಗಿದ್ದು, ಕಟ್ಟಡದ ಅಡಿಪಾಯ ದುರ್ಬಲಗೊಂಡಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ, ಕಟ್ಟಡ ಕುಸಿತಕ್ಕೆ ನಿಖರ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.
ಘಟನೆ ಕುರಿತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ. ಕಟ್ಟಡದ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆಯೂ ಸೂಚಿಸಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರ ತಿಳಿಸಿದೆ.
ಪೊಲೀಸರು ಕಟ್ಟಡದ ಮಾಲೀಕರು ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದು, ಘಟನೆಯೊಂದಿಗೆ ಸಂಪರ್ಕ ಹೊಂದಿರುವವರನ್ನು ಪತ್ತೆಹಚ್ಚುವ ಪ್ರಯತ್ನ ಮುಂದುವರಿಸಿದ್ದಾರೆ.
ಸುರಕ್ಷತೆ ಬಗ್ಗೆ ಹೆಚ್ಚಿದ ಆತಂಕ
ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಹಲವು ಪಿಜಿ ವಸತಿಗಳು ಮತ್ತು ಬಹುಮಹಡಿ ಕಟ್ಟಡಗಳಿವೆ. ಹಲವು ವರ್ಷಗಳಿಂದ ಇಲ್ಲಿ ವಸತಿ ಕಟ್ಟಡಗಳನ್ನು ವಿದ್ಯಾರ್ಥಿಗಳ ಪಿಜಿ ವಸತಿಗಳಾಗಿ ಪರಿವರ್ತಿಸಲಾಗಿದೆ.
ಈ ದುರಂತದ ಬಳಿಕ ಇಂತಹ ಹಳೆಯ ಕಟ್ಟಡಗಳು ಹಾಗೂ ಪಿಜಿ ವಸತಿಗಳ ಸುರಕ್ಷತಾ ಮಾನದಂಡಗಳ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ.