

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರಾಜಕೀಯ ಹೈಡ್ರಾಮಾ ನಡೆದಿದ್ದು, ನಂದಿಗ್ರಾಮ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.
ಮಮತಾ ಬಣದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಸಂಚಿತಾ ಪ್ರಧಾನ ದೇ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬಳಿಕ ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಈ ಘೋಷಣೆ ಮಾಡಿದ್ದಾರೆ.
ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ನಿರ್ಧಾರವನ್ನು ‘ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುವ ಉದ್ದೇಶದಿಂದ’ ಕೈಗೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಅಂತೆಯೇ ರೇಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊನೇ ಕ್ಷಣದಲ್ಲಿ ಕೈಕೊಟ್ಟ ನಂದಿಗ್ರಾಮ ಅಭ್ಯರ್ಥಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಬಣದಿಂದ ಕಣಕ್ಕಿಳಿದಿದ್ದ ಸಂಚಿತಾ ಪ್ರಧಾನ ದೇ ಶುಕ್ರವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.
ಮಮತಾ ಬಣದ ಅಭ್ಯರ್ಥಿ ನಾಮಪತ್ರ ಹಿಂಪಡೆದಿರುವ ಬೆಳವಣಿಗೆ, ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್ನ ಎರಡು ಬಣಗಳಿಗೆ ಪ್ರತ್ಯೇಕ ಹೆಸರು ಮತ್ತು ಚುನಾವಣಾ ಚಿಹ್ನೆಗಳನ್ನು ನೀಡಿದ ಕೆಲವೇ ಗಂಟೆಗಳ ಬಳಿಕ ನಡೆದಿದೆ.
ಹೀಗಾಗಿ ಅನ್ಯ ಮಾರ್ಗವಿಲ್ಲದೇ ಮಮತಾ ಬ್ಯಾನರ್ಜಿ ತಮ್ಮ ಸಮಾಮ ಮನಸ್ಕ ಪಕ್ಷವಾದ ಕಾಂಗ್ರೆಸ್ ಗೆ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿದ್ದಾರೆ.
ಇದೇ ವೇಳೆ, ಟಿಎಂಸಿಯ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸಿರುವ ಚುನಾವಣಾ ಆಯೋಗದ ಕ್ರಮದ ವಿರುದ್ಧ ಮಮತಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು ಅವರು ‘ಏಕಪಕ್ಷೀಯ’ ಎಂದು ಬಣ್ಣಿಸಿದ್ದಾರೆ.