

ಗುಣ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯ ಪ್ರದೇಶದ ಗುಣ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ, ಗುಲಾಬ್ಗಂಜ್ ಪ್ರದೇಶದ ನಿವಾಸಿಗಳು ಅವರನ್ನು ಭೇಟಿಯಾಗಿ ಸ್ಥಳೀಯ ರಸ್ತೆಗಳ ದುಸ್ಥಿತಿ ಹಾಗೂ ಇದರಿಂದ ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.
ರಸ್ತೆಗಳ ಸಮಸ್ಯೆ ಬಗೆಹರಿಯದಿದ್ದರೆ ಇನ್ನು ಮುಂದೆ ನಿಮಗೆ ಮತ ಹಾಕುವುದಿಲ್ಲ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದರು. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಸಿಂಧಿಯಾ, ನನ್ನೊಂದಿಗೆ ಈ ಭಾಷೆಯನ್ನು ಎಂದಿಗೂ ಬಳಸಬೇಡಿ ಎಂದು ಹೇಳಿದ್ದು, ಕೆಲ ಕ್ಷಣ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಆದಾಗ್ಯೂ, ಬಳಿಕ ಸಿಂಧಿಯಾ ಅವರು ನಿವಾಸಿಗಳ ಅಹವಾಲುಗಳನ್ನು ಆಲಿಸಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ನಂತರ ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆಗಳ ಕುರಿತು ಮಾತುಕತೆ ಮುಂದುವರಿಯಿತು.
ಸ್ಥಳೀಯ ನಿವಾಸಿಗಳ ಪ್ರಕಾರ, ರಸ್ತೆಗಳ ಹದಗೆಟ್ಟ ಸ್ಥಿತಿಯಿಂದಾಗಿ ಈ ಪ್ರದೇಶದ ಜನರು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸಚಿವರ ಮಧ್ಯಪ್ರವೇಶದಿಂದ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.
ಸಿಂಧಿಯಾ ಅವರ ಖಡಕ್ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚಾಸ್ಪದವಾಗಿದೆ.