

ಹೈದರಾಬಾದ್: ಗಣೇಶ ಪೆಂಡಾಲ್ ಬಳಿ ಮಾಂಸಾಹಾರ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ಭಾನುವಾರ ನಡೆದಿದೆ. 'ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದಾಗ, ಅಡುಗೆ ಪಾತ್ರೆಯ ಬಳಿ ಮಾಂಸಾಹಾರದ ಪೊಟ್ಟಣವನ್ನು ಎಸೆಯಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ.
ಆದರೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಮದನ್ನಪೇಟೆ ಪ್ರದೇಶದ ವಸತಿ ಸಮುಚ್ಚಯವೊಂದರ ಬಳಿ ನಡೆಯುತ್ತಿದ್ದ ಅನ್ನ ಸಂತರ್ಪಣೆ ಸ್ಥಳದ ಹೊರಗೆ ಮೂಳೆಗಳು ಮತ್ತು ಆಹಾರ ತ್ಯಾಜ್ಯವಿದ್ದ ಪೊಟ್ಟಣವೊಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ವಸತಿ ಸಮುಚ್ಚಯದ ಮೂವರು ನಿವಾಸಿಗಳು ಈ ಪೊಟ್ಟಣವನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ಬೆನ್ನಲ್ಲೇ ಕೆಲವು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಗಣೇಶ ಪಂಡಾಲ್ ಆಯೋಜಕ ಸಮಿತಿಯ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದರು.
ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ. ವದಂತಿಗಳನ್ನು ಹರಡದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.