ಬೆಂಗಳೂರು: ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಬಕಾರಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ ಅವರು ತಮ್ಮ ಖಾತೆಯ ಬಗೆಗಿನ ಅಸಮಾಧಾನದಿಂದಾಗಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಈಗಾಗಲೇ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಾರ್ಯದರ್ಶಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ತಮ್ಮ ರಾಜಿನಾಮೆ ಪತ್ರವನ್ನು ಫ್ಯಾಕ್ಸ್ ಮೂಲಕ ರವಾನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜಿನಾಮೆಗೆ ಅಸಮಾಧಾನ ಕಾರಣವಲ್ಲ: ಜಾರಕಿಹೊಳಿ ಸ್ಪಷ್ಟನೆ
"ನನ್ನ ರಾಜಿನಾಮೆಗೆ ಯಾವುದೇ ಅಸಮಾಧಾನ ಕಾರಣವಲ್ಲ. ಬದಲಾಗಿ ಸಮಾಜಮುಖಿ ಕಾರ್ಯಕ್ರಮಗಳಿಗಾಗಿ ನಾನು ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ಪಕ್ಷದ ಚಟುವಟಿಕೆಗಳಲ್ಲಿ ನಾನು ಹೆಚ್ಚಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ನನ್ನ ವೈಯುಕ್ತಿಕ ಆಸಕ್ತಿಯ ಕೆಲ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ರಾಜಿನಾಮೆ ನೀಡುತ್ತಿದ್ದೇನೆ".
"ತಾವು ಮುಖ್ಯಮಂತ್ರಿಗಳೊಂದಿಗೆ ಯಾವುದೇ ರೀತಿಯ ಅಸಮಾಧಾನ ಹೊಂದಿಲ್ಲ. ಮುಂದಿನ ಮೂರೂವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇಂದು ಬೆಳಗ್ಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಸಲ್ಲಿಸಿದ್ದೇನೆ. ಅಲ್ಲದೆ ನಾನು ಯಾವುದೇ ಕಾರಣದಿಂದಲೂ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಹೀಗಾಗಿ ನನ್ನ ರಾಜಿನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದೇನೆ" ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಆಬಕಾರಿ ಖಾತೆ ಬಗ್ಗೆ ಸತೀಶ್ ಜಾರಕಿಹೊಳಿ ಅಸಮಾಧಾನ..?
ಇನ್ನು ಸತೀಶ್ ಜಾರಕಿಹೊಳಿ ಅವರು ತಮ್ಮ ಅಬಕಾರಿ ಖಾತೆ ಬಗ್ಗೆ ಹೊಂದಿದ್ದ ಅಸಮಾಧಾನವೇ ರಾಜಿನಾಮೆಗೆ ಕಾರಣ ಎನ್ನಲಾಗುತ್ತಿದ್ದು, ಈ ಹಿಂದೆ ಹಲವು ಬಾರಿ ತಮ್ಮ ಖಾತೆಯನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಕಳೆದ ಒಂದು ವಾರದಿಂದಲೂ ಜಾರಕಿಹೊಳಿ ರಾಜಿನಾಮೆ ಊಹಾಪೊಹಗಳು ಹರಿದಾಡುತ್ತಿದ್ದು, ಇಂದು ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement