ಸಚಿವರೊಬ್ಬರಿಂದ ಅಕ್ರಮ: ರೇವಣ್ಣ

ಬಿಡಿಎ ಬಡಾವಣೆಗಳಲ್ಲಿ ನಡೆದ ಡಿನೋಟಿಫಿಕೇಷನ್ ನಲ್ಲಿ ಹಾಲಿ ಸಚಿವರೊಬ್ಬರಿಂದ ಅಕ್ರಮವಾಗಿದ್ದು..
ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ (ಸಂಗ್ರಹ ಚಿತ್ರ)
ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ (ಸಂಗ್ರಹ ಚಿತ್ರ)

ಬೆಂಗಳೂರು: ಬಿಡಿಎ ಬಡಾವಣೆಗಳಲ್ಲಿ ನಡೆದ ಡಿನೋಟಿಫಿಕೇಷನ್ ನಲ್ಲಿ ಹಾಲಿ ಸಚಿವರೊಬ್ಬರಿಂದ ಅಕ್ರಮವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಕಾರ್ಯದರ್ಶಿಗಳು ಪ್ರಸ್ತಾಪ ಮಂಡಿಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾನೂನು ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಈ ಅಕ್ರಮದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪವನ್ನೂ ಮಂಡಿಸಿದ್ದಾರೆ. ಈ ಸಭೆಯ ನಡಾವಳಿಯನ್ನು ಪರಿಶೀಲಿಸಿದರೆ ಎಲ್ಲವೂ ಅರಿವಾಗುತ್ತದೆ. ಮುಖ್ಯ ಕಾರ್ಯದರ್ಶಿ ಅಥವಾ ಎರಡು ಇಲಾಖೆಗಳ ಕಾರ್ಯದರ್ಶಿಗಳು ಈ ಬಗ್ಗೆವಿವರಣೆ ನೀಡಲಿ. ಇಲ್ಲದಿದ್ದರೆ, ಸಂಪೂರ್ಣದಾಖಲೆಯೊಂದಿಗೆ ವಿಧಾನಸಭೆಯಲ್ಲಿ ಎಲ್ಲ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹಾಸನದಲ್ಲೇ 1558 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರಿಹಾರಕ್ಕೆ ರು.20.77 ಕೋಟಿ ಯೋಜನೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕಳುಹಿಸಿ ಹಲವು ತಿಂಗಳಾಯಿತು.

ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಪತ್ರ ಬರೆದು ಯೋಜನೆ ಅನುಷ್ಠಾನಕ್ಕೆ ಕೋರಿದ್ದಾರೆ. ಆದರೆ, ಸಚಿವರು ಈವರೆಗೆ ಕ್ರಮ ಕೈಗೊಂಡಿಲ್ಲ ಎಂದು ರೇವಣ್ಣ ದೂರಿದರು.

ರಾಜ್ಯದಲ್ಲಿ ಎಲ್ಲ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಇದ್ದು, ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದು ಮಾತುಕತೆ ನಡೆಸಬೇಕು. ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com