ಮರಿಯಮ್ಮನಹಳ್ಳಿ: ಸರ್ಕಾರಿ ಸಂಸ್ಥೆಗಳಿಂದ ರೈತರು ಪಡೆದ ರು.2 ಲಕ್ಷಸಾಲ, ಅದರ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿ ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಭಾನುವಾರ ಸಂಜೆ ಹಗರಿಬೊಮ್ಮನಹಳ್ಳಿ ತಾಲೂಕಿನ ಜಿ. ಕೊಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನೇಕ ರೈತರು ಸಾಲಕ್ಕೆ ಹೆದರಿ, ಸರಿಯಾದ ಮಳೆಬೆಳೆ ಇಲ್ಲದೆ ಮಾಡಿದ ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ರೈತರು ಮಾಡಿರುವ ಸಾಲದಲ್ಲಿ ಸರ್ಕಾರ ರು.2 ಲಕ್ಷ, ಅದರ ಬಡ್ಡಿ ಮನ್ನಾ ಮಾಡಿ ಬೆಂಬಲಕ್ಕೆ ನಿಲ್ಲಬೇಕು. ರೈತರ ಆತ್ಮಹತ್ಯೆಗೆ ಸಾಂತ್ವನ ಹೇಳುವುದರಲ್ಲೇ ಕಾಲ ಕಳೆಯುವುದಕ್ಕಿಂತ ಮೃತ ರೈತ ಕುಟುಂಬದವರಿಗೆ ರು.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡು ಮೂರು ತಿಂಗಳಾದರೂ ಈವ-ರೆಗೆ ಯಾವುದೇ ರೈತನಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಆತ್ಮಹತ್ಯೆ ಮಾಡಿ ಕೊಂಡ ರೈತ ಕುಂಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಬೇಕು. ರೈತರಿಗೆ ಸರ್ಕಾರ ಪರ್ಯಾಯ ಸಾಲ ನೀಡಿ ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಪಾರು ಮಾಡಬೇಕು ಎಂದರು.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರವನ್ನು ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಚಿವರು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳುತ್ತಿದ್ದಾರೆ. ಆದರಲ್ಲೇ ಕಾಲ ಕಳೆಯದೇ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಕ್ಕರೆ ಕಾರ್ಖಾನೆಗಳಿಂದ ರೈತರ ಕಬ್ಬಿನ ಬಾಕಿ ವಸಲಾತಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ರೈತರಿಗೆ ಕಿರುಕುಳ ನೀಡುತ್ತಿರುವ ಮೀಟರ್ ಬಡ್ಡಿದಾರರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Advertisement