ಬೆಂಗಳೂರು: ವಸತಿ ಸಚಿವ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಅಂಬರೀಶ್ ಅವರ ಆಪ್ತ ಎಂದೇ ಗುರುತಿಸಿಕೊಂಡಿರುವ ಅಮರಾವತಿ ಚಂದ್ರಶೇಖರ್ ಅವರು ಮಂಗಳವಾರ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆ ನಗರದ ಅಜ್ಞಾತ ಸ್ಥಳವೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅಮರಾವತಿ ಚಂದ್ರಶೇಖರ್ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಇದೀಗ ಮಂಡ್ಯ ಕಾಂಗ್ರೆಸ್ ತೀವ್ರ ಸಂಚಲನ ಉಂಟುಮಾಡಿದ್ದು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಮಂಡ್ಯ ಕಾಂಗ್ರೆಸ್ ವಲಯದಲ್ಲಿ ಮಾತ್ರವಲ್ಲ, ಒಟ್ಟಾರೆ ಕಾಂಗ್ರೆಸ್ ಪಾಳಯದಲ್ಲಿಯೇ ಸಂಚಲನ ಮೂಡಿಸಿದ್ದಾರೆ.
ಮೂಲಗಳ ಪ್ರಕಾರ ಇಬ್ಬರೂ ನಾಯಕರು ಮಂಡ್ಯ ನಗರಸಭೆ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಭೇಟಿ ಕುರಿತು ರಾಜ್ಯ ಕಾಂಗ್ರೆಸ್ ನ ಯಾವೊಬ್ಬ ನಾಯಕರಿಗೂ ಮಾಹಿತಿ ನೀಡದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಇದು ಕೆಲ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಭೇಟಿ ವೇಳೆ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಕೆಲ ಜೆಡಿಎಸ್ ಪಕ್ಷದ ಕೆಲ ಮುಖಂಡರು ಕೂಡ ಉಪಸ್ಥಿತರಿದ್ದರು.
ಮಂಡ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಎರಡು ಬಣ ನಿತ್ಯ ತಿಕ್ಕಾಟ ನಡೆಸುತ್ತಿದ್ದು, ಈ ಭೇಟಿ ಜಿಲ್ಲೆಯಲ್ಲಿ ಇನ್ನಷ್ಟು ಗೊಂದಲ, ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Advertisement