ಬಿಎಸ್‍ವೈ ವಿರುದ್ಧ ದುರುದ್ದೇಶ ಇಲ್ಲ: ಗೃಹ ಸಚಿವ ಕೆ.ಜೆ. ಜಾರ್ಜ್

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ...
ಗೃಹ ಸಚಿವ ಕೆ.ಜೆ. ಜಾರ್ಜ್
ಗೃಹ ಸಚಿವ ಕೆ.ಜೆ. ಜಾರ್ಜ್
Updated on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯೇ ರಾಜಕೀಯ ದುರುದ್ದೇಶದಿಂದ ಕೂಡಿದೆ. ನ್ಯಾಯಾಲಯದ ಆದೇಶದ ಪ್ರಕಾರ ಈ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಯನ್ನು ಲೋಕಾಯುಕ್ತರೇ ನಡೆಸುತ್ತಿದ್ದು, ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆಯೇ ಸಿಐಡಿಗೆ ಸೂಚನೆ ನೀಡಿದೆ. ಈ ಪ್ರಕ್ರಿಯೆ ಆರಂಭವಾದ ಸಂದರ್ಭದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿರಲಿಲ್ಲ. ಹೀಗಾಗಿ ದುರುದ್ದೇಶದಿಂದ ಪ್ರಕರಣ ದಾಖಲಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು.

ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಿಎಜಿ ವರದಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಬಂದ ಆರೋಪ ಹಿನ್ನೆಲೆಯಲ್ಲಿ ಜಯಕುಮಾರ್ ಹಿರೇಮಠ್ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ 2013ರ ನ.13ರಂದು ಹೈ ಕೋರ್ಟ್ ವಿಭಾಗೀಯ ಪೀಠ ಲೋಕಾಯುಕ್ತಕ್ಕೆ ವಿಚಾರಣೆ ನಡೆಸುವಂತೆ ಆದೇಶಿಸಿತ್ತು. ಲೋಕಾಯುಕ್ತ ಕಾಯ್ದೆ ಪ್ರಕಾರ ಅವರು ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದಕ್ಕೆ ಅವಕಾಶವಿದ್ದು, ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಪ್ರಕರಣ ದಾಖಲು ಮಾಡಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ವಿವರಿಸಿದರು.

ಕಾನೂನು ಪ್ರಕಾರ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೂ ಸಿಐಡಿಯಿಂದ ವರದಿ ಕೇಳುವುದಕ್ಕೆ ಅಧಿಕಾರವಿಲ್ಲ. ಅದೇ ರೀತಿ ಅಕ್ರಮ ಗಣಿಗಾರಿಕೆ ವಿಚಾರದಲ್ಲೂ ಸರ್ಕಾರ ಎಸ್‍ಐಟಿ ರಚನೆ ಮಾಡಿದೆ. ಇದರ ಕಾರ್ಯ ನಿರ್ವಹಣೆಯಲ್ಲೂ ಸರ್ಕಾರ ಹಸ್ತಕ್ಷೇಪ ಮಾಡುವುದಕ್ಕೆ ಅವಕಾಶವಿಲ್ಲ. ಎಸ್‍ಐಟಿ ನೇರವಾಗಿ ಲೋಕಾಯುಕ್ತ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸುತ್ತದೆ ಎಂದರು.

ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಭೇಟಿ ಬಗ್ಗೆ ನಾವು ಆತಂಕಗೊಂಡಿಲ್ಲ. ಅವರು ಈ ಹಿಂದೆಯೂ ಭೇಟಿಯಾಗಿದ್ದರು. ಇಲ್ಲವಾದರೆ ಅವರು ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವಿತ್ತೇ ಎಂದು ಹೇಳಿದರು. ಚಾರ್ಜ್‍ಶೀಟ್: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ. ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸುತ್ತಾರೆ ಎಂದರು.

ಮಾಹಿತಿ ಕೊಟ್ಟು ಬರುವುದಿಲ್ಲ:
ನಗರದಲ್ಲಿ ಬೇರೆ ಬೇರೆ ರಾಜ್ಯದಿಂದ ಬಂದವರು ಕಳ್ಳತನ ನಡೆಸುತ್ತಿದ್ದಾರೆ. ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಬಗ್ಗೆ ಮಾಧ್ಯಮದವರು ಪ್ರಚಾರ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಕಳ್ಳತನವಾದಾಗ ನೀಡಿ ಆದ್ಯತೆಯನ್ನು ಕಳ್ಳರನ್ನು ಹಿಡಿದಾಗ ನೀಡಲ್ಲ. ಇರಾನಿ ಗ್ಯಾಂಗ್ ನವರು ನಮಗೆ ಮಾಹಿತಿಕೊಟ್ಟು ಬರುವುದಿಲ್ಲ. ಜನರು ಚಿನ್ನ ಧರಿಸಿ ಓಡಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ನಾನು ನಗರ ಪ್ರದಕ್ಷಿಣೆ ಹಾಕುವುದರಿಂದ ಸರಗಳ್ಳತನ ಕಡಿಮೆಯಾಗುವುದಾದರೆ ಅದಕ್ಕೂ ಸಿದ್ಧ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com