ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್, ಉಪ ಮೇಯರ್ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ರೆಸಾರ್ಟ್ ರಾಜಕೀಯ ಆರಂಭಿಸಿದ್ದು, ಕಾಂಗ್ರೆಸ್ ಕಾರ್ಪೊರೇಟರ್ಗಳನ್ನು ಮಡಿಕೇರಿಗೆ ಶಿಫ್ಟ್ ಮಾಡಲಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಕಾರ್ಪೊರೇಟರ್ ಗಳ ಸಭೆ ನಡೆಯಿತು. ಸಭೆಯ ಬಳಿಕ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ತಮ್ಮ ಪಕ್ಷದ ಸದಸ್ಯರನ್ನು ಮಡಿಕೇರಿಗೆ ಕರೆದೊಯ್ದಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜತೆ ಕೈಜೊಡಿಸಿರುವ ಜೆಡಿಎಸ್ ಸದಸ್ಯರು ಈಗಾಗಲೇ ಕೇರಳದಲ್ಲಿ ಬೀಡು ಬಿಟ್ಟಿದ್ದಾರೆ.
ಒಟ್ಟು ಮೂರು ಬಸ್ಗಳಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗಳು ಮಡಿಕೇರಿಯ ರೆಸಾರ್ಟ್ಗಳಿಗೆ ತೆರಳಿದ್ದು, ಸೆ.11ರಂದು ನಗರಕ್ಕೆ ವಾಪಸ್ ಆಗಲಿದ್ದಾರೆ. ಸೆ.11ಕ್ಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ದಿನಾಂಕ ನಿಗದಿಯಾಗಿದ್ದು, 260 ಅರ್ಹ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಹುದ್ದೆಯ ಆಕಾಂಕ್ಷಿಗಳು ಅಂದು ಬೆಳಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಂತರ 11.30ರ ವೇಳೆಗೆ ಮೇಯರ್, ಉಪ ಮೇಯರ್ ಚುನಾವಣೆಗೆ ಸಭೆ ಆರಂಭಿಸಲಾಗುತ್ತದೆ. ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಆರಂಭದಲ್ಲೇ ಜಯಂತಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
Advertisement