ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ವಿಸರ್ಜಿಸುವಂತೆ ಒತ್ತಾಯಿಸಿ ಬಿಜೆಪಿ ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಬಿಎಸ್ ವೈ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಕ್ಷಣವೇ ಎಸಿಬಿ ರಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಜನಾಭಿಪ್ರಾಯಕ್ಕೆ ಮನ್ನಣೆ ನೀಡಿ, ಎಸಿಬಿಯನ್ನು ಹಿಂಪಡೆಯಲಿ. ಇಲ್ಲದಿದ್ದರೆ ಅವರ ಸ್ಥಾನಕ್ಕೆ ಕುತ್ತು ಬಂದು ರಾಜೀನಾಮೆ ನೀಡುವ ಪರಿಸ್ಥಿತಿಯೂ ಬರುತ್ತದೆ ಎಂದು ಯಡಿಯೂರಪ್ಪ ಎಚ್ಚರಿಸಿದರು.
ಇದೇ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಲೋಕಾಯುಕ್ತ ಸಂಸ್ಥೆಯನ್ನು ಮುಗಿಸಲು ಸಿದ್ದರಾಮಯ್ಯ ಸಂಚು ನಡೆಸಿದ್ದಾರೆ. ಅವರ ಅಕ್ರಮಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚಿಸಲಾಗಿದೆ ಎಂದು ಆರೋಪಿಸಿದರು.
ಎಸಿಬಿ ವಿರುದ್ಧ ಬಿಜೆಪಿ ಇಂದಿನಿಂದ ರಾಜ್ಯದ ಎಲ್ಲೆಡೆ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಶಾಸಕರುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈ ಅಭಿಯಾನ ನಡೆಸುತ್ತಿದ್ದಾರೆ.