ಎಸ್ಸಿ,ಎಸ್ಟಿ ಮೀಸಲಾತಿ ಪ್ರಮಾಣ ಏರಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಲು ಮೀಸಲಾತಿ ಪ್ರಮಾಣವನ್ನು ಈಗಿರುವ ಶೇ 50ರ ಮಿತಿಯನ್ನು .,..
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಲು ಮೀಸಲಾತಿ ಪ್ರಮಾಣವನ್ನು ಈಗಿರುವ ಶೇ 50ರ ಮಿತಿಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪರಿಶಿಷ್ಟ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪರಿಶಿಷ್ಟ ಜಾತಿಯ ಜನಸಂಖ್ಯೆ ಶೇ.17.15ರಷ್ಟಿದ್ದು, ಈ ಜನಾಂಗಕ್ಕೆ ಶೇ.15ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅದೇ ರೀತಿ ಶೇ.6.95ರಷ್ಟು ಇರುವ ಪರಿಶಿಷ್ಟ ಪಂಗಡಕ್ಕೆ ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಬೇಕು ಎಂಬ ಬೇಡಿಕೆ ಇದೆ. ಮೀಸಲಾತಿ ಹೆಚ್ಚಿಸಬೇಕಾದರೆ, ಈಗಿರುವ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಬೇಕು.

ಆದರೆ, ಮೀಸಲಾತಿ ಶೇ.50 ದಾಟಬಾರದು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟ ನಿರ್ದೇಶನ ಇದೆ. ಒಟ್ಟಾರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕಾದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಹಾಗಾಗಿ ಇದು ಕೇಂದ್ರ ಸರ್ಕಾರ ಮಾಡುವ ಕೆಲಸ. ಆದರೂ ಮೀಸಲಾತಿ ಪ್ರಮಾಣ ಹೆಚ್ಚಾಗಿ ಎಸ್ಸಿ, ಎಸ್ಟಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಆಗಬೇಕು ಅನ್ನುವುದು ನನ್ನ ಆಶಯ. ಆದ್ದರಿಂದ ಈ ನಿಟ್ಟಿನಲ್ಲಿ ಕಾನೂನು ಇಲಾಖೆ ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಎಸ್ಸಿ, ಎಸ್ಟಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯಡಿ 19 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com