ಬೆಂಗಳೂರು: ಕಳೆದ ಸೋಮವಾರ ನಡೆದ ಕಾವೇರಿ ಗಲಾಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಪಾತ್ರ ಇದೆ ಎಂಬ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ.
ಪರಮೇಶ್ವರ ಅವರು ಆಧಾರ ಇಲ್ಲದೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಈ ಸಂಬಂಧ ಅವರಿಗೆ ಗುಪ್ತಚರ ಇಲಾಖೆಯಿಂದ ವರದಿ ಬಂದಿದೆ ಎಂದು ರಾಯರೆಡ್ಡಿ ಅವರು ತಿಳಿಸಿದ್ದಾರೆ.
ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ಬೆಂಗಳೂರಂತು ಅಕ್ಷರಶಃ ಬೆಂಕಿಯ ಕೆನ್ನಾಲಿಗೆಗೆ ನಲುಗಿತ್ತು. ಈ ಗಲಾಟೆಯಿಂದೆ ಆರ್ಎಸ್ಎಸ್ ಕೈವಾಡವಿರುವ ಅನುಮಾನವಿದೆ ಎಂದು ಪರಮೇಶ್ವರ್ ಹೇಳಿದ್ದರು.
ಪರಮೇಶ್ವರ ಅವರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಗೃಹ ಸಚಿವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿ ಆರೋಪಿಸುತ್ತಿದ್ದಾರೆ ಎಂದಿದ್ದಾರೆ. ಅಲ್ಲದೆ ಈ ಕೂಡಲೇ ಅವರು ಆರ್ಎಸ್ಎಸ್ ಕ್ಷಮೆಯಾಚಿಸಬೇಕು ಎಂದು ಶೆಟ್ಟರ್ ಆಗ್ರಹಿಸಿದ್ದಾರೆ.