ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ಸಭೆಗೆ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಗೈರಾಗಿದ್ದಾರೆ.
ಸಭೆಯ ನಂತರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಜಗದೀಶ ಶೆಟ್ಟರ್ ಹಾಗೂ ಈಶ್ವರಪ್ಪ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಮೊದಲೇ ಅನುಮತಿ ಪಡೆದಿದ್ದಾರೆ. ಈ ನಾಯಕರ ಗೈರು ಹಾಜರಿಗೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಪಕ್ಷದೊಳಗಿನ ಬಿಕ್ಕಟ್ಟು ಪರಿಹರಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಷಾ ನಾಲ್ವರ ಸಮಿತಿ ರಚಿಸಿದ್ದಾರೆ. ಕಳೆದ ಫೆಬ್ರುವರಿ 10ರೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡುವಂತೆಯೂ ಅವರು ಸೂಚಿಸಿದ್ದರು. ಇದುವರೆಗೂ ಸಮಿತಿ ಸಭೆ ಕರೆದಿಲ್ಲ ಯಡಿಯೂರಪ್ಪ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಈಶ್ವರಪ್ಪ ಸಭೆಗೆ ಹಾಜರಾಗಿಲ್ಲ ಎಂದು ಹೇಳಲಾಗುತ್ತಿದೆ.
ಹಣದ ಹಂಚಿಕೆ,ಅಧಿಕಾರದ ದುರುಪಯೋಗ, ಜೆಡಿಎಸ್ ಜೊತೆಗೆ ಹೊಂದಾಣಿಕೆ, ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.