ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂಬ ವರದಿ ಬಂದ ನಂತರ ಕರ್ನಾಟಕದಿಂದ ಇನ್ನಷ್ಟು ಸಂಸದರು ಸಚಿವರಾಗುವ ಆಸೆ ಗರಿಗೆದರಿದೆ. ವಿಧಾನಸಭೆ ಚುನಾವಣೆ ಸದ್ಯದಲ್ಲಿಯೇ ಇರುವುದರಿಂದ ಈ ಬಾರಿ ಮೋದಿ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕದ ಸಂಸದರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಮೋದಿ ಸಚಿವ ಸಂಪುಟದಲ್ಲಿ ಪ್ರಸ್ತುತ ಕರ್ನಾಟಕದಿಂದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್, ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಕುಡಿಯುವ ನೀರು ಮತ್ತು ಸ್ವಚ್ಛತೆ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಇದ್ದಾರೆ.
ಜಿ.ಎಂ.ಸಿದ್ದೇಶ್ವರ ರಾಜಿನಾಮೆ ನಂತರ ರಾಜ್ಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯದಿಂದ ಮೋದಿ ಸಂಪುಟದಲ್ಲಿ ಯಾರೂ ಸಚಿವರಿಲ್ಲ. ಹಾಗಾಗಿ ಬೆಳಗಾವಿ ಸಂಸದ ಎಂಪಿ ಸುರೇಶ್ ಅಂಗಡಿ ಮತ್ತು ರಾಜ್ಯ ಸಭಾ ಸದಸ್ಯ ಪ್ರಭಾಕರ್ ಕೋರೆಯವರ ಹೆಸರು ಕೇಳಿಬರುತ್ತಿದೆ. ಇನ್ನು ಶಿವಕುಮಾರ್ ಉದಾಸಿಯವರ ಹೆಸರು ಕೂಡ ಕೇಳಿಬರುತ್ತಿದೆ.
ಒಕ್ಕಲಿಗ ಸಮುದಾಯಕ್ಕೆ ಇನ್ನಷ್ಟು ಪ್ರಾಶಸ್ತ್ಯ ನೀಡಲು ಸದಾನಂದ ಗೌಡ ಅವರಿಗೆ ಪ್ರಮುಖ ಖಾತೆ ನೀಡುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವ ಮಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೂಡ ಮೋದಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
ಬಿಜೆಪಿ ಪ್ರತಿಭಟನೆ: ಸಿದ್ದರಾಮಯ್ಯ ಸಂಪುಟದಿಂದ ಭ್ರಷ್ಟ ಸಚಿವರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೊ ನಡೆಯಲಿದೆ. ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಿಂದ ಮೆರವಣಿಗೆ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.