ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು, ಬಿಎಸ್ ವೈ ಪಕ್ಷದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಬಾರದು ಎಂದು ಬುಧವಾರ ಹೇಳಿದ್ದಾರೆ.
ಇಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ನಡೆದ ರಾಜ್ಯ ಬಿಜೆಪಿ ನಾಯಕರ ಅತೃಪ್ತ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷರಾದ ನಂತರ ಪಕ್ಷದಲ್ಲಿನ ಹಳಬರು ಮೂಲೆಗುಂಪಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕಿದೆ ಎಂದಿದ್ದಾರೆ.
ಯಡಿಯೂರಪ್ಪ ಅವರು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹೊಸಬರಿಗೆ ಪಕ್ಷದ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಹೊಸಬರಿಗೆ ಪಕ್ಷದ ಹಿರಿಯ ನಾಯಕರ ಪರಿಚಯವಿಲ್ಲ. ಕೆಲವು ಜಿಲ್ಲೆಗಳಲ್ಲಿ ಪದಾಧಿಕಾರಿಗಳ ಬದಲಾವಣೆಯಾಗಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಯಡಿಯೂರಪ್ಪ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕೊಡಬೇಕು ಎಂದು ಈಶ್ವರಪ್ಪ ಅವರು, ಎಲ್ಲಾ ಬದಲಾವಣೆಗಳಿಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬಳಿ ಹೋಗಿ ಎಂದು ಹೇಳುವುದನ್ನು ಅವರು ಬಿಡಬೇಕು ಎಂದು ತಾಕೀತು ಮಾಡಿದರು.
ಇನ್ನು, ತಮ್ಮ ರಾಯಣ್ಣ ಬ್ರಿಗೇಡ್ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ಅವರು, ಜ.26 ರಂದು ರಾಯಣ್ಣ ಬಲಿದಾನ ದಿನಾಚರಣೆ ಆಚರಿಸುತ್ತೇವೆ . 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಹಲವು ಮಠಾಧೀಶರು ಭಾಗವಹಿಸುತ್ತಿದ್ದಾರೆ ಎಂದರು.