ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದೆ, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ .ಡಿ ದೇವೇಗೌಡ ಅವರನ್ನು ಮಂಗಳವಾರ ಸಂಜೆ ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.
ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ಜೆಡಿಎಸ್ ಬಳಿ ಅಗತ್ಯ ಸದಸ್ಯರ ಸಂಖ್ಯೆಯಿದೆ. ಪರಮೇಶ್ವರ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದು ಬೆಂಬಲ ಕೋರಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರುವ ಯಾವುದೇ ದಾಖಲೆಯಿಲ್ಲ, ಹೀಗಾಗಿ ಇದೊಂದು ಐತಿಹಾಸಿಕ ಘಟನೆ ಎಂದು ಸಭಾಪತಿ ಶಂಕರಮೂರ್ತಿ ಹೇಳಿದ್ದಾರೆ.
ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರುವ ಕಾಂಗ್ರೆಸ್ ಉಗ್ರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರರುವ ಶಂಕರಮೂರ್ತಿ ನನ್ನ ರಾಜೀನಾಮೆ ಕೇಳು ನೈತಿಕ ಹಕ್ಕು ಕಾಂಗ್ರೆಸ್ ಸದಸ್ಯರಿಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ಅವಿಶ್ವಾಸ ನಿರ್ಣಯದ ವಿರುದ್ಧ ತಾವು ಗೆಲುವು ಸಾಧಿಸುವುದಾಗಿ ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಜೆಡಿಎಸ್ ಜೊತೆ ಮಾತುಕತೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಶಂಕರಮೂರ್ತಿ ಮನವಿ ಮಾಡಿದ್ದಾರೆ, ಆದರೆ ಶಂಕರಮೂರ್ತಿ ಜೊತೆ ಉತ್ತಮ ಬಾಂಧವ್ಯ ವಿಲ್ಲದ ಕಾರಣ ಯಡಿಯೂರಪ್ಪ ಜೆಡಿಎಸ್ ಜೊತೆ ಮಾತುಕತೆ ನಡೆಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಜೆಡಿಎಸ್ ಸಭೆ ನಡೆಸಿ ತಮ್ಮ ನಿಲುವಿನ ಬಗ್ಗೆ ಚರ್ಚಿಸಿದೆ. ಒಂದು ವೇಳೆ ಕಾಂಗ್ರೆಸ್ ಜೊತೆ ಜೆಡಿಎಸ್ ಕೈ ಜೋಡಿಸಿದರೇ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಭಾಪತಿಯಾಗಿ ಆಯ್ಕೆಯಾಗಲಿದ್ದಾರೆ.