ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಬ್ಯುಸಿಯಾಗಿದೆ, ಇದೇ ವೇಳ್ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು 'ಕಮಲ' ಪಕ್ಷಕ್ಕೆ ಶಾಕ್ ನೀಡಲು ಯೋಜನೆ ರೂಪಿಸುತ್ತಿವೆ.
ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವ ಉದ್ದೇಶದಿಂದ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಕೆಳಗಿಳಿಸಲು ಯೋಜನೆ ರೂಪಿಲಾಗುತ್ತಿದೆ.
ವಿಧಾನಪರಿಷತ್ನ ಜೆಡಿಎಸ್ ಸದಸ್ಯ ಟಿ.ಎ. ಶರವಣ ಜತೆ ಸಿಎಂ ಸಿದ್ದರಾಮಯ್ಯ ಈ ವಿಷಯ ಪ್ರಸ್ತಾಪಿಸಿದ್ದು, ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ ಕುಮಾರಸ್ವಾಮಿ ಜತೆ ಮಾತುಕತೆ ನಡೆಸುವಂತೆ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯರು ಸಿಎಂ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಂಡಿಸಿದ್ದು, ಅವರೂ ಹಸಿರು ನಿಶಾನೆ ತೋರಿದ್ದಾರೆಂದು ಹೇಳಲಾಗಿದೆ.
ಇದೇ ಅಧಿವೇಶನದಲ್ಲಿಯೇ ಶಂಕರ ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕೆ? ಎನ್ನುವುದರ ಕುರಿತು ಕಾಂಗ್ರೆಸ್ ಸದಸ್ಯರು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆಯೆಂದು ತಿಳಿದು ಬಂದಿದೆ.
ಕಳೆದ ವರ್ಷವೇ ಇಂಥದ್ದೊಂದು ಪ್ರಯತ್ನ ನಡೆದಿತ್ತಾದರೂ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ಹೊಂದಾಣಿಕೆ ಕೊರತೆಯಿಂದ ಸಾಧ್ಯವಾಗಿರಲಿಲ್ಲ. ಜೆಡಿಎಸ್ನವರು ತಮ್ಮ ಪಕ್ಷಕ್ಕೆ ಸಭಾಪತಿ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದರಿಂದ ಕಷ್ಟವಾಯಿತು. ಆದರೆ, ಈ ಬಾರಿ ಅವಿಶ್ವಾಸ ನಿರ್ಣಯ ಮಂಡಿಸಿದರೆ ತಾವು ಬೆಂಬಲಿಸುವುದಾಗಿ ಜೆಡಿಎಸ್ ಕಡೆಯಿಂದ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.
ಈ ಬಾರಿಯೂ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರ ಹೆಸರು ಸಭಾಪತಿ ಸ್ಥಾನಕ್ಕೆ ಕೇಳಿಬರುತ್ತಿದೆ. ಈ ಹಿಂದೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮರಿತಿಬ್ಬೆಗೌಡ ಮೇಲ್ಮನೆ ಉಪ ಸಭಾಪತಿಯಾಗಿ ನೇಮಕಗೊಂಡಿದ್ದರು.
Advertisement