ಚಳಿಗಾಲ ಅಧಿವೇಶನ: ಸಚಿವ ಜಾರ್ಜ್ ಪ್ರಕರಣ ಮುಂದಿಟ್ಟು ಸರ್ಕಾರ ಹಣಿಯಲು ಪ್ರತಿಪಕ್ಷಗಳು ಸಜ್ಜು!

ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಸಚಿವ ಕೆ.ಜೆ. ಜಾರ್ಜ್ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತೀವ್ರವಾಗಿ ತರಾಟೆಗೆ...
ಸುವರ್ಣ ಸೌಧ, ಬೆಳಗಾವಿ
ಸುವರ್ಣ ಸೌಧ, ಬೆಳಗಾವಿ
Updated on
ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಸಚಿವ ಕೆ.ಜೆ. ಜಾರ್ಜ್ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧತೆಗಳನ್ನು ಮಾಡಿಕೊಂಡಿವೆ. 
ಚಳಿಗಾಲ ಅಧಿವೇಶನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು, ಗಣಪತಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಚಿವ ಜಾರ್ಜ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಆದಾಗ್ಯೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಜ್ ರಕ್ಷಣೆಗೆ ಮುಂದಾಗಿದ್ದಾರೆಯ ಜಾರ್ಜ್ ರಾಜೀನಾಮೆ ನೀಡುವವರೆಗೆ ಇಲ್ಲವೇ ಸಂಪುಟದಿಂದ ವಜಾ ಮಾಡುವವರೆಗೂ ಸದರನದಲ್ಲಿ ಹೋರಾಟ ನಡೆಸುತ್ತೇವೆ. ಹೋರಾಟದ ಸ್ವರೂಪ ಹೇಗಿರಬೇಕು ಎಂಬುದನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಿದ್ದೇವೆಂದು ಹೇಳಿದ್ದಾರೆ.
 ಜಗದೀಶ್ ಶೆಟ್ಟರ್ ಅವರ ಹೇಳಿಕೆಯನ್ನು ಗಮನಿಸಿದರೆ ಈ ಬಾರಿಯ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸುಗಮ ಕಲಾಪ ನಡೆಯುವುದು ಅನುಮಾನವೆಂದೇ ಹೇಳಲಾಗುತ್ತಿದೆ. 
ಡಿವೈಎಸ್'ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರೇ ಕಾರಣ ಎಂದು ಸ್ವತಃ ಹೇಳಿಕೆ ನೀಡಿದ್ದರು. ಆ ವೇಳೆಯೂ ಸಚಿವ ಜಾರ್ಜ್ ರಾಜೀನಾಮೆ ನೀಡಿರಲಿಲ್ಲ. ಕೊನೆಗೆ ನ್ಯಾಯಾಲಯದಿಂದ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದ ಬಳಿಕ ರಾಜೀನಾಮೆ ಕೊಟ್ಟಿದ್ದರು. ಆದರೆ, ಪ್ರಕರಣವನ್ನಿ ಸಿಐಡಿ ತನಿಖೆಗೆ ವಹಿಸಿ, ಕೇವಲ ಒಂದೂವರೆ ತಿಂಗಳಲ್ಲಿ ಕ್ಲೀನ್ ಚಿಟ್ ಕೊಡುವಂತೆ ನೋಡಿಕೊಳ್ಳಲಾಯಿತು. 
ಬೇರೆಲ್ಲಾ ಪ್ರಕರಣಗಳನ್ನು ವರ್ಷಾನುಗಟ್ಟಲೆ ತನಿಖೆ ನಡೆಸುವ ಸಿಐಡಿಯು ಸಚಿವ ಜಾರ್ಜ್ ಗೆ ತುರ್ತಾಗಿ ಕ್ಲೀನ್ ಚಿಟ್ ನೀಡಿತ್ತು. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೇ ಸಿಐಡಿ ಪರಿಶೀಲಿನೆ ನಡೆಸಿರಲಿಲ್ಲ. ಆದಾದ ಬಳಿಕ ಕೂಡಲೇ ಮತ್ತೆ ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ಆದರೆ, ಇದೀಗ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ಪುನಃ ಎಫ್ಐಆರ್ ದಾಖಲಿಸಿದೆ. ಹೀಗಾಗಿ ಸಚಿವ ಜಾರ್ಜ್ ರಾಜೀನಾಮೆ ನೀಡಲೇಬೇಕು ಎಂದು ತಿಳಿಸಿದರು. 
ಇದೇ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿರುವ ಅವರು, ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿರುವ ವೇಣುಗೋಪಾಲ್ ಸಂತ್ರಸ್ತ ಮಹಿಳೆಗೆ ಹಲವು ಬಾರಿ ಬೆದರಿಕೆಗಳನ್ನು ಹಾಕಿದ್ದಾರೆ. ಈ ಕುರಿತು ತನಿಖಾ ವರದಿಯಲ್ಲಿ ಉಲ್ಲೇಖವಾಗಿದ್ದು, ಇಂತಹವರು ರಾಜ್ಯ ಉಸ್ತುವಾರಿಯಾಗಿರಬೇಕಾ? ಅಪರಾಧ ಆರೋಪ ಎದುರಿಸುತ್ತಿರುವ ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಮುಂದುವರೆಯುವುದು ಸೂಕ್ತವಲ್ಲ. ಹಾಗಾಗಿ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಹೈಕಮಾಂಡ್ ವೇಣುಗೋಪಾಲ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಇಲ್ಲದೇ ಇದ್ದರೆ, ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಬಳಿಕ ದೇಶಪಾಂಡೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಕುರಿತಂತೆ ದೇಶಪಾಂಡೆಯವರು ನೀಡಿರುವ ಮಾಹಿತಿ ತಪ್ಪಾಗಿದೆ. ಜನವರಿಯಿಂದ ಸೆಪ್ಟೆಂಬರ್ ಅವಧಿಯಲ್ಲಿ ರೂ.1,47,625 ಕೋಟಿ ಹೂಡಿಕೆ ಪ್ರಸ್ತಾವನೆಯಲ್ಲಿ ಅನುಮೋದನೆಗೊಂಡ ಯೋಜನೆಗಳ ಮೊತ್ತ ರೂ.8,934,47 ಕೋಟಿ ಮಾತ್ರ. ಇದರಲ್ಲಿ ಈ ವರೆಗೂ ಒಂದೂ ಯೋಜನೆ ಅನುಷ್ಠಾನಗೊಂಡಿಲ್ಲ ಎಂದು ತಿಳಿಸಿದರು. 
2016ರಲ್ಲಿ ರೂ.2,45,584 ಕೋಟಿ ಪ್ರಸ್ತಾವನೆ ಬಂದಿದೆ ಎಂದು ದೇಶಪಾಂಡೆ ಹೇಳಿದ್ದಾರೆ. ಆದರೆ, ಅನುಮೋದನೆ ಆದ ಯೋಜನೆಗಳ ಮೊತ್ತ ರೂ.11,158 ಕೋಟಿ. 1088 ಕಂನಿಗಳಲ್ಲಿ 122 ಒಪ್ಪಂದ ಆಗಿದೆ. ಇದರಲ್ಲಿ ಸ್ಥಾಪನೆಗೊಂಡ ಕಂಪನಿಗು 67. ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವ ದೇಶಪಾಂಡೆಯವರು ತಪ್ಪು ಮಾಹಿತಿ ನೀಡಿದ್ದಾರೆಂದು ಟೀಕಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com