ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ನಾಳೆ ಕೊನೆಯಾಗಲಿದೆ. ಬೆಂಗಳೂರಿನಲ್ಲಿ ನಾಳೆ ಬೃಹತ್ ಸಾರ್ವಜನಿಕ ರ್ಯಾಲಿ ನಡೆಯಲಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಭಾಷಣದೊಂದಿಗೆ ಮುಕ್ತಾಯವಾಗಲಿದೆ. ನಾಳೆ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 4ರಿಂದ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ನಾಳೆ ರಾಹುಲ್ ಗಾಂಧಿಯವರು ಶೇಷಾದ್ರಿಪುರಂನ ಜಕ್ಕರಾಯನಕೆರೆ ಮೈದಾನದಲ್ಲಿ ಸಫಾಯ್ ಕರ್ಮಚಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ. ನಂತರ ಅವರು ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಕ್ಯಾಂಪಸ್ ನಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಈಗಾಗಲೇ 1,500 ಉದ್ಯಮಿಗಳಿಗೆ ಆಹ್ವಾನ ಕಳಿಸಿದ್ದಾರೆ. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕರ್ನಾಟಕ ವಾಣಿಜ್ಯೋದ್ಯಮಿಗಳ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಸುಮಾರು ಸಾವಿರ ಉದ್ಯಮಿಗಳು ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಸುಗಮ ಆಡಳಿತಕ್ಕೆ ಬೇಕಾದ ವಿಷಯಗಳನ್ನು ಉದ್ಯಮಿಗಳು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
ಏಪ್ರಿಲ್ 14ರ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಏಪ್ರಿಲ್ 14ರ ನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
Advertisement