ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 17 ದಿನ ಬಾಕಿ ಇದ್ದು, ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಆಡಳಿತರೂಢ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕುರ್ಚಿಗಾಗಿ ಈಗಗಾಲೇ ತೀವ್ರ ಪೈಪೋಟಿ ಆರಂಭವಾಗಿದೆ.
ನಿನ್ನೆಯಷ್ಟೇ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಆಟೋಮ್ಯಾಟಿಕ್ ಆಯ್ಕೆ ಅಲ್ಲ ಎಂಬ ಸುಳಿವು ನೀಡಿದ್ದರು.
ನನ್ನ ನೇತೃತ್ವದಲ್ಲೇ ಪಕ್ಷ ಚುನಾವಣೆ ಎದುರಿಸುತ್ತಿರುವುದರಿಂದ ಸಹಜವಾಗಿಯೇ ನಾನು ಮುಂದಿನ ಮುಖ್ಯಮಂತ್ರಿಯ ರೇಸ್ ನಲ್ಲಿ ಮೊದಲಿಗನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಎನ್ ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯದ ಜನತೆಗೆ ತೃಪ್ತಿ ಇದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಸವಾಲಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಮೋದಿ ಅದರ ನಾಯಕರಾಗಿದ್ದಾರೆ ಅಷ್ಟೆ ಎಂದರು.
ಜಾತ್ಯಾತೀತ ಪಕ್ಷಗಳು ಕೋಮುವಾದಿಗಳನ್ನು ಅಧಿಕಾರದಿಂದ ದೂರ ಉಳಿಸಲು ಒಂದಾಗಬೇಕು ಎಂದು ನಾನು ಬಯಸುತ್ತೇನೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉತ್ತಮ ರಾಜಕೀಯ ತಂತ್ರಗಾರರಲ್ಲ. ಕರ್ನಾಟಕದಲ್ಲಿ ಅವರ ಯಾವ ತಂತ್ರಗಾರಿಕೆ ಫಲ ನೀಡಿದೆ. ಕೋಮು ಗಲಭೆ ನಡೆದಿದ್ದು ಬಿಟ್ಟರೆ ಅವರ ಯಾವ ತಂತ್ರಗಾರಿಕೆಗಳಲ್ಲೆವೂ ವಿಫಲ ಎಂದು ಸಿದ್ದರಾಮಯ್ಯ ಹೇಳಿದರು.