ರಾಜಕೀಯ
ರಫೇಲ್ ವಿವಾದ: ರಾಹುಲ್ ಕ್ಷಮೆಯಾಚಿಸಲಿ; ಬಿಜೆಪಿ ಆಗ್ರಹ
ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ...
ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ ನಡೆಸಿತು.
ನಗರದ ಆನಂದ್ ರಾವ್ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಬಳಿ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಬಿಜೆಪಿಯ ಸ್ವಚ್ಛವಾದ ಆಡಲಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೋದಿಯವರು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲಿಯೂ ಮನ್ನಣೆ ಪಡೆದಿದ್ದಾರೆಂದು ಹೇಳಿದ್ದಾರೆ.
ರಾಹುಲ್ ಗಾಂಧಿಯವರು ದಾಖಲೆಗಳಿಲ್ಲದೆ ವಿನಾಕಾರಣ ಆರೋಪ ಮಾಡಿದ್ದಾರೆ. ಇದು ನಿಜವಾಗಿದ್ದರೆ ಅವರು ಸದನದಲ್ಲಿ ದಾಖಲೆಗಳನ್ನು ಇಟ್ಟು ಚರ್ಚೆ ನಡೆಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಬೀದಿಯಲ್ಲಿ ನಿಂತು ಮಾತನಾಡಬಾರದು ಎಂದು ತಿಳಿಸಿದ್ದಾರೆ.
ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ವಿಫಲ ಯತ್ನ ನಡೆಸಿದರು. ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಬಿಜೆಪಿ ನಗರಾಧ್ಯಕ್ಷ ಸದಾಶಿವ, ಖಜಾಂಚಿ ಸುಬ್ಬ ನರಸಿಂಹ ಪಾಲ್ಗೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ