ರಾಜ್ಯದಲ್ಲಿ ಬರಪರಿಸ್ಥಿತಿ ಇದ್ದರೂ ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ: ಯಡಿಯೂರಪ್ಪ

ರಾಜ್ಯದಲ್ಲಿ ಬರಪರಿಸ್ಥಿತಿಯಿದ್ದರೂ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ
Updated on

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಹಾಗೂ ನೀರಿನ ಸಮಸ್ಯೆ ತಲೆದೋರಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗಾಗಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಿಂಗಾಪುರ ಪ್ರವಾಸದಲ್ಲಿದ್ದಾರೆ  ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 156 ತಾಲೂಕುಗಳಲ್ಲಿ  ಬರ ಹಾಗೂ ನೀರಿನ ತೊಂದೆರೆ ಇದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೊಸವರ್ಷ ಆಚರಿಸಲು ಮುಖ್ಯಮಂತ್ರಿ ಸಿಂಗಾಪುರಕ್ಕೆ ಹೋಗಿದ್ದಾರೆ. ಸಂಪುಟ ಸಚಿವರು ಸಹ ಹೊಸ ವರ್ಷಾಚರಣೆಗೆ ವಿವಿಧ ಕಡೆಗೆ ಹೋಗಿದ್ದಾರೆ ಎಂದು ಟೀಕಿಸಿದರು.

176 ತಾಲೂಕುಗಳ ಪೈಕಿ 156 ತಾಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಯಡಿಯೂರಪ್ಪ, ಜನರ ಕಲ್ಯಾಣದ ಬಗ್ಗೆ ಕುಮಾರಸ್ವಾಮಿ ಗಮನ ಹರಿಸುತ್ತಿಲ್ಲ. ಅವರೊಬ್ಬ ಬೇಜವಾಬ್ದಾರಿಯುತ ಮುಖ್ಯಮಂತ್ರಿ ಎಂದು ಆರೋಪಿಸಿದರು.

ಕಳೆದ ಕೆಲವು ತಿಂಗಳುಗಳಿಂದಲೂ ರೈತರ ಸಾಲ ಮನ್ನಾ ಬಗ್ಗೆ ಮಾತನಾಡುತ್ತಿರುವ ಕುಮಾರಸ್ವಾಮಿ,  ಈವರೆಗೂ ಎಷ್ಟು ರೈತರ ಸಾಲ ಮನ್ನಾ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಕುರಿತ ಸ್ಪಷ್ಟ ಮಾಹಿತಿಯನ್ನು ಏಕೆ ಕುಮಾರಸ್ವಾಮಿ ನೀಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ರಾಜ್ಯದಲ್ಲಿನ ರೈತರ ಸಾಲ ಮನ್ನಾ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಕುಟುಂಬದೊಂದಿಗೆ ನಿನ್ನೆ ರಾತ್ರಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದು, ನಾಳೆ ಬೆಂಗಳೂರಿಗೆ ವಾಪಾಸ್ಸಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com