ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರ ನಡೆಸಲು ಯಾವುದೇ ಒತ್ತಡ ಇಲ್ಲ. ತಮ್ಮಕಣ್ಣೀರಿಗೆ ಕಾರಣವನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಷೇಶ ಸ್ಥಾನಮಾನ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ನೀಡಲಾಗಿದೆ ಎಂದರು.
ನಂಜುಂಡಪ್ಪ ವರದಿ ಅನುಸಾರ ಉತ್ತರ ಕರ್ನಾಟಕಕ್ಕೆ 3 ಸಾವಿರ ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವ ಪ್ರಸ್ತಾಪವೇ ಬರಬಾರದು ಎಂದರು.
ಇದೇ ವೇಳೆ ಶೀಘ್ರ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆಗಲಿದೆ ಎಂದು ಮಾಜಿ ಸಿಎಂ ತಿಳಿಸಿದರು.