ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಜೊತೆಗಿನ ಸಮ್ಮಿಶ್ರ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಲಿ ಮತ್ತು ಮುಂದಿನ ಐದು ವರ್ಷಗಳ ಕಾಲ ಎಚ್ ಡಿ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿರಲಿ ಎಂದು ಬಯಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ)ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.
ಜೆಡಿಎಸ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದಕ್ಕೆ ಕಾಂಗ್ರೆಸ್ ಅಥವಾ ಕಾಂಗ್ರೆಸ್ ನಾಯಕರು ಕಾರಣರಲ್ಲ ಎಂದು ನೂತನ ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.
ಸಾಮಾನ್ಯವಾಗಿ ಎಲ್ಲಾ ಮುಖ್ಯಮಂತ್ರಿಗಳಿಗೂ ಒತ್ತಡ ಇರುತ್ತದೆ. ಆದರೆ ಕುಮರಾಸ್ವಾಮಿ ಅವರು ಮಾಧ್ಯಮ ಮತ್ತು ಸಾಮಾಜಿಕ ತಾಣಗಳ ನಕಾರಾತ್ಮಕತೆಯಿಂದ ಭಾವೋದ್ವೇಗಕ್ಕೆ ಒಳಗಾಗಿರಬೇಕು. ಪ್ರಮುಖವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುವಾದಿ ಅಂಶಗಳನ್ನು ಮತ್ತು ತಪ್ಪು ಮಾಹಿತಿಯನ್ನು ಬಿತ್ತರಿಸುವ ಮೂಲಕ ರಾಜ್ಯದಲ್ಲಿ ನಕಾರಾತ್ಮಕ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದರು.
ನಾನು ಸ್ವತಃ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ತಮ್ಮ ಕಣ್ಣೀರಿಗೆ ಕಾಂಗ್ರೆಸ್ ಕಾರಣ ಅಲ್ಲ. ನಕಾರಾತ್ಮಕತೆಯೇ ಭಾವೋದ್ವೇಗಕ್ಕೆ ಒಳಗಾಗಲು ಕಾರಣ ಎಂದು ಸ್ಪಷ್ಟವಾಗಿ ಹೇಳಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.