ಲಿಂಗಾಯತ ಧರ್ಮ ಕುರಿತು ಸಿಎಂ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ವಿಜಯಪುರ: ಕೇಂದ್ರ ಸರ್ಕಾರ ತಿರಸ್ಕರಿಸಿದ ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾವನೆ ಇದೀಗ ಹೊಸ ಸಮ್ಮಿಶ್ರ ಸರ್ಕಾರಕ್ಕೆ ಪರೀಕ್ಷೆಯಾಗಿದೆ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾನಮಾನ ನೀಡಿ ಅಂಗೀಕಾರಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿತ್ತು.
ಈ ಬಗ್ಗೆ ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ನನ್ನೊಬ್ಬನ ತೀರ್ಮಾನವಾಗಿರಲಿಲ್ಲ ಮತ್ತು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ನನ್ನ ಜವಬ್ದಾರಿ ಕೂಡ ಅಲ್ಲ ಎಂದು ಹೇಳಿ ಜಾರಿಕೊಂಡಿದ್ದಾರೆ.
ನಿನ್ನೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಧರ್ಮದ ಪ್ರಸ್ತಾವನೆ ಕುರಿತು ನನಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ ಮತ್ತು ಈ ವಿಚಾರ ಸಂಬಂಧ ಯಾವುದೇ ನಾಯಕರಲ್ಲಿ ಮಾತುಕತೆ ನಡೆಸಿಲ್ಲ ಎಂದರು.
ಇನ್ನು ಮುಂದಿನ ತೀರ್ಮಾನವನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ತೆಗೆದುಕೊಳ್ಳಬೇಕು. ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಕುರಿತು ಇನ್ನು ನನ್ನ ಕೆಲಸವೇನೂ ಇಲ್ಲ ಎಂದರು.
ಸಚಿವ ಸಂಪುಟ ರಚನೆ ಕುರಿತು ಕಾಂಗ್ರೆಸ್ ಪಕ್ಷದೊಳಗಿನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಪಕ್ಷದೊಳಗೆ ಬಗೆಹರಿಸದಿರುವ ಕೆಲವು ಸಣ್ಣಪುಟ್ಟ ಸಮಸ್ಯೆಗಳಿರಬಹುದು. ಆದರೆ ಪಕ್ಷದ ಮತ್ತು ಸರ್ಕಾರದ ಹಿತದೃಷ್ಟಿಯಿಂದ ಅವುಗಳನ್ನು ಸದ್ಯದಲ್ಲಿಯೇ ಬಗೆಹರಿಸುತ್ತೇವೆ. ಈ ಹಿಂದೆ ಅಸಮಾಧಾನಗೊಂಡಿದ್ದ ಎಲ್ಲಾ ಭಿನ್ನಮತೀಯ ಶಾಸಕರು ಸಮ್ಮಿಶ್ರ ಸರ್ಕಾರದ ಸುಗಮ ಆಡಳಿತಕ್ಕೆ ಒಪ್ಪಿದ್ದಾರೆ. ಅವರೆಲ್ಲರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕನಕಗುರು ಪೀಠದ ಈಶ್ವರಾನಂದ ಸ್ವಾಮಿಗಳ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ಅದರಂತೆ ಸ್ವಾಮಿಗಳು ಕೂಡ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಇದು ಸಮ್ಮಿಶ್ರ ಸರ್ಕಾರ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಪ್ರಶ್ನೆಗೆ ಉತ್ತರಿಸುತ್ತಾ ಕೂರುವ ಸಮಯವಲ್ಲವಿದು ಎಂದರು.
ನಂತರ ಸಿದ್ದರಾಮಯ್ಯನವರು ನಿನ್ನೆ ಬಾದಾಮಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಹರಿಹಾಯ್ದರು. ತಮ್ಮ 5 ದಿನಗಳ ಬಾದಾಮಿ ಕ್ಷೇತ್ರ ಪ್ರವಾಸವನ್ನು ಮುಗಿಸಿದರು.